ದತ್ತಜಯಂತಿ ಹಿನ್ನೆಲೆ ಡಿ. 5 – 9 ರವರೆಗೆ ಮುಳ್ಳಯ್ಯನಗಿರಿ ಭಾಗದ ಪ್ರವಾಸಿತಾಣಗಳಿಗೆ ಪ್ರವಾಸಿಗರ ನಿಷೇಧ: ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್

ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ ಡಿ. 6 ರಿಂದ ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಭಕ್ತಾಧಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಹೆಚ್ಚಿನ ಭದ್ರತೆಯನ್ನು ಈಗಾಗಲೇ  ವಹಿಸಲಾಗಿದೆ ಎಂದು  ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದಾರೆ.

ಸುಗಮ ಸಂಚಾರ ದೃಷ್ಠಿಯಿಂದ ರಸ್ತೆ ದುರಸ್ಥಿ ಕಾರ್ಯ ನಡೆಸಲಾಗಿದ್ದು, ತಾತ್ಕಾಲಿಕ ಆರೋಗ್ಯ ಸೌಲಭವನ್ನು ಒದಗಿಸಲು 3 ದಿನದ ಮಟ್ಟಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗುವುದು.

ಭಕ್ತರು ಬೆಟ್ಟಕ್ಕೆ ತೆರಳಲು ಅನುಕೂಲವಾಗುವಂತೆ ಖಾಸಗಿ ಸಂಘ ಸಂಸ್ಥೆಯವರೊಂದಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಜೊತೆಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಡಿ. 6 ರಂದು ಅನುಸೂಯ ಜಯಂತಿ ನಡೆಯಲಿದ್ದು, ಅಂದು ಬೋಳರಾಮೇಶ್ವರ ದೇವಸ್ಥಾನದಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುವರೆಗೂ ಮೆರವಣಿಗೆ ನಡೆಯಲಿದೆ. ಸುಮಾರು 5-6 ಸಾವಿರ ಜನರು ಸೇರುವ ಸಾಧ್ಯತೆಯಿದೆ. ಡಿ. 7ರಂದು ನಗರದ ಕಾಮಧೇನು ಗಣಪತಿ ದೇವಸ್ಥಾನ ಆವರಣದಿಂದ ಆಜಾದ್‍ಪಾರ್ಕ್ ವೃತ್ತದವರೆಗೂ ಶೋಭಾಯಾತ್ರೆ ನಡೆಯಲಿದ್ದು, 30 ಸಾವಿರಕ್ಕೂ ಅಧಿಕ ಜನ ಸೇರುವ ಬಗ್ಗೆ ಮಾಹಿತಿ ಇದೆ.

ಡಿ. 8 ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಇದರ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮಕೈಗೊಳ್ಳಲಾಗಿದೆ. ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕ್ಯಾಮೆರಾ, ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ದತ್ತ ಜಯಂತಿ ಕಾರ್ಯಕ್ರಮಗಳ ದಿನದಂದು ಸಂಚಾರ ವ್ಯವಸ್ಥೆಯಲ್ಲಿ ಕೆಲವೊಂದು ಮಾರ್ಪಡುಗಳನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡು ಸಮುದಾಯಗಳ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟರ್ ಹಾಕದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇನ್ನೂ ಅನ್ಯ ಧರ್ಮ ಜನರ ಭಾವನೆಗೆ ಧಕ್ಕೆಯಾಗುಂತಹ ಘೋಷಣೆಗಳನ್ನು ಕೂಗದಂತೆ ಸೂಚನೆ ನೀಡಲಾಗಿದೆ.

ದತ್ತಜಯಂತಿ ಹಿನ್ನೆಲೆ ಡಿಸೆಂಬರ್ 5 ರ ಬೆಳಿಗ್ಗೆ 6 ಗಂಟೆಯಿಂದ ಡಿ. 9 ರ ಬೆಳಿಗ್ಗೆ 10 ಗಂಟೆಯವರೆ ಮುಳ್ಳಯ್ಯನಗಿರಿ ಭಾಗದ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದ್ದಾರೆ.