ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ: ಪಂತ್ ಸ್ಥಿತಿ ಗಂಭೀರ

ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಕಾರು ಅಪಘಾತವಾಗಿದೆ. ಪಂತ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿಯಾದ ರಭಸಕ್ಕೆ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ ಎಂದು ಹೇಳಲಾಗಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ರಿಷಬ್ ಪಂತ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಿತಿ ಗಂಭೀರವಾಗಿದೆ. ತಲೆ, ಬೆನ್ನು ಮತ್ತು ಕಾಲಿಗೆ ಗಂಭೀರ ಗಾಯವಾಗಿದೆ.

ದೆಹಲಿ-ಡೆಹ್ರಾಡೂನ್ ಹೆದ್ದಾರಿ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ರಿಷಬ್ ಅವರ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಪಘಾತದ ಸಮಯದಲ್ಲಿ ರಿಷಭ್ ಪಂತ್ ತಮ್ಮ BMW ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಪ್ರಕಾರ, ಉರಿಯುತ್ತಿರುವ ಕಾರಿನಿಂದ ಹೊರಬರಲು ಅವರು ವಿಂಡ್‌ಸ್ಕ್ರೀನ್ ಅನ್ನು ಒಡೆದಿದ್ದಾರೆ. ಇದರ ಜೊತೆಗೆ ಅವರು ತಲೆ, ಮೊಣಕಾಲು ಮತ್ತು ಮೊಣಕಾಲಿಗೆ ಗಾಯಗಳಾಗಿವೆ. ಪಂತ್ ಅವರ ಕಾಲು ಮುರಿದಿರುವ ಸಾಧ್ಯತೆಯಿರುವುದರಿಂದ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಹೇಳಲಾಗಿದೆ.

ಟೀಂ ಇಂಡಿಯಾದ ಭವಿಷ್ಯದ ನಾಯಕ ಎಂತಲೇ ಬಿಂಬಿತರಾಗಿರುವ ಪಂತ್​ ಅಪಘಾತಕ್ಕೀಡಾಗಿರುವುದು ಟೀಂ ಇಂಡಿಯಾ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರು ಕೂಡ ಈ ಸುದ್ದಿಯಿಂದ ಶಾಕ್​ಗೆ ಒಳಗಾಗಿದ್ದು, ರಿಷಬ್ ಪಂತ್ ಬೇಗ ಗುಣಮುಖರಾಗಲಿ ಎಂದು ಟ್ವೀಟರ್​ನಲ್ಲಿ ಹಾರೈಸಿದ್ದಾರೆ.