ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಐದು ಜಿಲ್ಲೆಗಳ 51, 900 ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮಳಖೇಡದಲ್ಲಿ ಸಾಂಕೇತಿಕವಾಗಿ ಐವರಿಗೆ ಹಕ್ಕು ಪತ್ರ ವಿತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು.

ನಂತರ ಲಂಬಾಣಿ ಭಾಷೆಯಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಸಂತಾ ಸೇವಾಲಾಲ್, ಬಸವೇಶ್ವರರು ಹಾಗೂ ಗಾಣಗಾಪುರ ದತ್ತಾತ್ತ್ರೇಯ ಸ್ಮರಿಸಿದರು.  ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನೀಡುತ್ತಿದೆ. ಹಕ್ಕು ಪತ್ರ ವಿತರಣೆಯಿಂದ ಬಂಜಾರ ಸಮುದಾಯ ಅಭಿವೃದ್ಧಿಯಾಗಲಿದೆ. ಈ ಭಾಗದಲ್ಲಿ ಬರೋಬ್ಬರಿ 50 ವರ್ಷಗಳ ಬಳಿಕ ಬದಲಾವಣೆಯಾಗಿದೆ ಎಂದರು. 

ರಾಷ್ಟ್ರದ ಪ್ರಗತಿಯಲ್ಲಿ ಬಂಜಾರ ಸಮುದಾಯ ಕೊಡುಗೆ ನೀಡುತ್ತಿದ್ದು, ಈ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪಿಎಂ ಆವಾಸ್ ಮೂಲಕ ಎಲ್ಲಾ ಸೌಲಭ್ಯಗಳು ಸಿಗುತ್ತಿವೆ. ಮುದ್ರಾ ಯೋಜನೆಗಳಿಂದ ಪರಿಶಿಷ್ಟ ಸಮುದಾಯಕ್ಕೆ ಅನುಕೂಲವಾಗಿದೆ. ನೀರು, ಗ್ಯಾಸ್ ಸೇರಿದಂತೆ ಪ್ರತಿಯೊಂದು ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸುತ್ತಿದ್ದು,  ಸಮಾಜದ ಪ್ರತಿ ವರ್ಗಕ್ಕೂ ಅನುಕೂಲಕರವಾದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.