ಮತಾಂತರ ನಿಷೇಧ ಕಾಯ್ದೆ ವಾಪಸ್: ಸರ್ಕಾರದ ವಿರುದ್ಧ ಸಿಡಿದೆದ್ದ ವಿಶ್ವ ಹಿಂದೂ ಪರಿಷತ್, ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು, ಎಪಿಎಂಪಿ ತಿದ್ದುಪಡಿ ಕಾಯ್ದೆ ವಾಪಸಾತಿ, ಪಠ್ಯಪರಿಷ್ಕರಣೆಗೆ ಸಮ್ಮತಿ ನೀಡಿರುವುದಕ್ಕೆ ಬಿಜೆಪಿ ನಾಯಕರು ಆಕ್ರೋಶಗೊಂಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದ ಹಿನ್ನೆಲೆಯಲ್ಲಿ ಹಿಂದೂಪರ  ಸಂಘಟನೆಗಳು ಸಿಡಿದೆದಿದ್ದು, ಸರ್ಕಾರ ವಿರುದ್ಧ ಕರ್ನಾಟಕದಾದ್ಯಂತ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.

ಸರ್ಕಾರದ ನಿರ್ಧಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ಇಂದು(ಜೂನ್ 16) ಸಂಜೆ 4 ಗಂಟೆಗೆ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದೆ. ಬೆಂಗಳೂರಿನಲ್ಲಿ ಮಾತ್ರವಲ್ಲದೇ ವಿಶ್ವ ಹಿಂದೂ ಪರಿಷತ್ ಇಂದು(ಜೂನ್ 16) ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದ್ದು, ಕಾನೂನು ಚೌಕಟ್ಟಿನಲ್ಲಿ ಇಂದು ಸಂಜೆ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಇಂದು ಸಂಜೆ 5 ಗಂಟೆಗೆ ಬೃಹತ್ ಪ್ರತಿಭಟನೆಗೆ ಪ್ಲಾನ್​ ಮಾಡಲಾಗಿದೆ. ಕಾನೂನು ಚೌಕಟ್ಟಿನಲ್ಲಿ ರಾಜ್ಯಾದ್ಯಂತ ಶಾಂತಿಯುತ ಪ್ರತಿಭಟನೆಗೆ ನಿರ್ಧರಿಸಿದೆ. ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಗಟ್ಟಲು 2022 ಮೇ ನಲ್ಲಿ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತ್ತು. ಇದೀಗ ಈ ಕಾಯ್ದೆಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಹಿಂಪಡೆಯಲು ತೀರ್ಮಾನಿಸಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ಬಿಜೆಪಿ ಅವಧಿಯಲ್ಲಿನ ಕಲೆ ಕಾನೂನು ಬದಲಾವಣೆ ಮಾಡುವ ಬಗ್ಗೆ ತೀರ್ಮಾನಿಸಿತ್ತು.

ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು, ಎಪಿಎಂಪಿ ತಿದ್ದುಪಡಿ ಕಾಯ್ದೆ ವಾಪಸಾತಿ, ಪಠ್ಯಪರಿಷ್ಕರಣೆಗೆ ಸಮ್ಮತಿ ನೀಡಿರುವುದಕ್ಕೆ ಬಿಜೆಪಿ ನಾಯಕರು ಗರಂ ಆಗಿದ್ದು, ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಪ್ಲ್ಯಾನ್ ಮಾಡಿದ್ದಾರೆ. ನಿನ್ನೆ (ಜೂನ್ 15) ತಡರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸದಸ್ಯರು ಹಾಗೂ ಪ್ರಮುಖಕ ವರ್ಚುವಲ್ ಸಭೆಯಲ್ಲಿ ಈ ಬಗ್ಗೆ ಮಹತ್ವದ ಚರ್ಚೆಯಾಗಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆಗೆ ರೂಪುರೇಷಗಳನ್ನು ಹೆಣೆಯಲಾಗಿದೆ.

ಬಿಜೆಪಿ ನಾಯಕರ ಸಭೆಯಲ್ಲಿ ರಾಜ್ಯ ಸರ್ಕಾರ ಕ್ಯಾಬಿನೆಟ್‍ನಲ್ಲಿ ತೆಗೆದುಕೊಂಡ ನಿರ್ಣಯದ ಬಗ್ಗೆ ಚರ್ಚಿಸಲಾಗಿದೆ. ಮತಾಂತರ ಕಾಯ್ದೆ, ಎಪಿಎಂಸಿ, ಪಠ್ಯಪುಸ್ತಕ ಹಾಗೂ ವಿದ್ಯುತ್ ದರ ಏರಿಕೆ ವಿರುದ್ಧ ಹೋರಾಟದ ರೂಪುರೇಷೆ ಕುರಿತು ಚರ್ಚಿಸಲಾಗಿದೆ. ಸಚಿವ ಸಂಪುಟ ಸಭೆಯ ನಿರ್ಣಯದ ವಿರುದ್ಧ ಇಂದು ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗೆ ‌ನಿರ್ಧಾರ ಮಾಡಿದ್ದಾರೆ.