ಶಾಲಾ ಕಾಂಪೌಂಡ್ ಕುಸಿದು ವಿದ್ಯಾರ್ಥಿಗೆ ಗಂಭೀರ ಗಾಯ – 5 ಶಿಕ್ಷಕಿಯರಿಗೆ ಶೋಕಾಸ್ ನೋಟಿಸ್

ರಾಯಚೂರು: ಶಾಲೆಯ ಕಾಂಪೌಂಡ್ ಕುಸಿದು 3ನೇ ತರಗತಿಯ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಯಚೂರಿನ ಮೈಲಾರಲಿಂಗ ನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಸುರೇಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಜೂನ್ 16 ರಂದು ಮಧ್ಯಾಹ್ನ ಊಟ ಮಾಡಿದ ಬಳಿಕ ಶಾಲೆಯ ಗೇಟ್ ಬಳಿ ಆವಾಡುತ್ತಿದ್ದಾಗ ಗೇಟ್ ಬಾಲಕನ ಮೈಮೇಲೆ ಬಿದ್ದು ತಲೆ, ಹೊಟ್ಟೆ, ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.

ಘಟನೆ ಹಿನ್ನೆಲೆ ಮುಖ್ಯ ಶಿಕ್ಷಕಿ ಮಂಜುಳಾ ಸೇರಿ 5 ಸಹಶಿಕ್ಷಕಿಯರಿಗೆ ಶಿಕ್ಷಣ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ತನಿಖಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಭಂಡಾರಿ ಹೇಳಿದ್ದಾರೆ. 

ಶಾಲಾ ಶಿಕ್ಷಕರು ಹಾಗೂ ಎಸ್‌ಡಿಎಂಸಿ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಪೋಷಕರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.