ಎನ್‌ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ

ಬೆಂಗಳೂರು: ನ್ಯಾಷನಲ್ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಷನ್ ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ ಹಾಗೂ ಕೇಂದ್ರೀಯ ಭಂಡಾರ ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಅಲ್ಲಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತೀಯ ಆಹಾರ ಮಂಡಳಿಯಿಂದ 34 ರೂ. ಅಕ್ಕಿ, 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆಜಿ ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

ವಾರ್ಷಿಕ 10,092 ಕೋಟಿ ರೂ.:
ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840 ಕೋಟಿ ರೂ. ವೆಚ್ಚ ತಗುಲಲಿದೆ. ವರ್ಷಕ್ಕೆ 10,092 ಕೋಟಿ ವೆಚ್ಚವಾಗಲಿದೆ. ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ. ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಸರ್ಕಾರದವರು ಅಕ್ಕಿ ನೀಡಲು ಒಪ್ಪುತ್ತಿಲ್ಲ. ರಾಜ್ಯ ಬಿಜೆಪಿ ಪಕ್ಷದವರು ರಾಜ್ಯದ ಬಡವರಿಗೆ ಅನುಕೂಲವಾಗಲು ಅಕ್ಕಿಯನ್ನು ವಿತರಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಬಹುದಲ್ಲ? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೆ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದರು.

ಪಂಜಾಬ್ ಸರ್ಕಾರದೊಂದಿಗೆ ಚರ್ಚೆ:
ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡಲು ಸಿದ್ಧವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪಂಜಾಬ್‌ನಿಂದ ಅಕ್ಕಿ ಖರೀದಿ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚಿಸಿದ್ದಾರೆ. ರಾಜ್ಯ ತಿಳಿಸುವ ದರಕ್ಕೆ ಅಕ್ಕಿ ನೀಡಲು ಪಂಜಾಬ್ ಸರ್ಕಾರದೊಂದಿಗೆ ಮತ್ತೊಮ್ಮೆ ಚರ್ಚಿಸಲಾಗುವುದು ಎಂದರು.

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ತಪ್ಪದೇ ಚಾಲನೆ:
ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವವರೆಗೆ ಸರ್ಕಾರದ ಬಳಿ ಸಮಯವಿದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿ, ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್‌ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಚಾಲನೆಗೊಳಿಸಲಿದೆ ಎಂದು ಭರವಸೆ ನೀಡಿದರು.