ಯಲ್ಲಾಪುರದಲ್ಲಿ ಲಾರಿಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಗ್ಯಾಸ್‌ ಟ್ಯಾಂಕರ್‌

ಲಾರಿಯೊಂದಕ್ಕೆ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ ಘಟ್ಟದ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ನಡೆದಿದೆ. ಮಹಾರಾಷ್ಟ್ರದ ರತ್ನಗಿರಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಟ್ಯಾಂಕರ್, ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ ಗ್ಯಾಸ್ ಸಣ್ಣ ಪ್ರಮಾಣದಲ್ಲಿ ಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ತಡೆಯಲಾಗಿತ್ತು.‌ ಅಂಕೋಲಾ ಕಡೆಗೆ ಹೋಗುವ ವಾಹನಗಳಿಗೆ ಶಿರಸಿ ಮೂಲಕ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿತ್ತು…

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಹಾಗೂ ತಂತ್ರಜ್ಞರು ಗ್ಯಾಸ್ ಸೋರಿಕೆಯಾಗುವುದನ್ನು ತಡೆಯುವಲ್ಲಿ ಯಶಸ್ವಿಯಾದರು. ಟ್ಯಾಂಕರನ್ನು ಮೇಲಕ್ಕೆತ್ತಲಾಗಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕ ಹಾಗೂ ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಡಿಕ್ಕಿಯಾದ ಇನ್ನೊಂದು ಲಾರಿಯೂ ಜಖಂಗೊಂಡಿದ್ದು, ಚಾಲಕ ಹಾಗೂ ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಸಿಪಿಐ ರಂಗನಾಥ ನೀಲಮ್ಮನವರ್ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಸಂಚಾರ ವ್ಯವಸ್ಥೆ ನಿಯಂತ್ರಿಸುವಲ್ಲಿ ಶ್ರಮಿಸಿದರು…

ಶ್ರೀಧರ್‌ ಅನಲಗಾರ್‌, ನುಡಿ ಸಿರಿ ನ್ಯೂಸ್‌, ಯಲ್ಲಾಪುರ