ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುವೆ: ಮಾಜಿ ಸಚಿವ ವಿ ಸೋಮಣ್ಣ

ಬೆಂಗಳೂರು, ಜುಲೈ 16: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಮಾನ ನೀಡದೇ ಹೋದರೆ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳುವೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಗೋವಿಂದರಾಜನಗರ ಕ್ಷೇತ್ರದ ವಾರ್ಡ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 365 ದಿನವೂ ಜನರ ನಡುವೆ ಇದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಮಾನ ಕೊಡಿ ಎಂದು ಹೇಳಿದ್ದೇನೆ ಎಂದರು.

ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗು ನನಗೆ ಗೊತ್ತು. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುವೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟ ಮಾಡುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ಸೋಲಿಗೆ ಪಕ್ಷದಲ್ಲಿರುವ ಅಸಮಾಧಾನವೇ ಕಾರಣ

ಗೋವಿಂದರಾಜನಗರ ಕ್ಷೇತ್ರವನ್ನು ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾತಿಗೆ ಗೌರವ ನೀಡಿ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಗೋವಿಂದರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸುಲಭವಾಗಿತ್ತು ಎಂದರು.

ಚುನಾವಣೆಯಲ್ಲಿ ಸೋಲಿಗೆ ಪಕ್ಷದಲ್ಲಿರುವ ಅಸಮಾಧಾನವೇ ಕಾರಣವಾಯಿತು. ಹಿರಿಯ ಮುಖಂಡರುಗಳ ಪಕ್ಷ ವಿರೋಧಿ ಕೆಲಸದಿಂದ ನನಗೆ ಸೋಲುಂಟಾಯಿತು.