ನನ್ನ ಮನೆ ಮಣಿಪುರದಲ್ಲಿದೆ, ಶಾಂತಿ ಮರುಸ್ಥಾಪಿಸುವಂತೆ ಪ್ರಧಾನಿ ಮೋದಿಗೆ ಮೀರಾಬಾಯಿ ಚಾನು ಮನವಿ

ಇಂಫಾಲ್: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಸ್ವತಃ ಪ್ರಧಾನಿ ಮೋದಿ ಅವರೇ ಮಧ್ಯಸ್ಥಿಕೆ ವಹಿಸಬೇಕು ಎಂದು ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರು ಮನವಿ ಮಾಡಿಕೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಎರಡು ಸಮುದಾಯಗಳ ಮಧ್ಯೆ ನಡೆಯುತ್ತಿರುವ ಘರ್ಷಣೆಯನ್ನು ಶೀಘ್ರವಾಗಿ ಪರಿಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಮಣಿಪುರದಲ್ಲಿ ಮೇ 3 ರಿಂದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ನಡೆಯುತ್ತಿದೆ. ಇದುವರೆಗೆ ಘರ್ಷಣೆಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಸ್ತುತ ಯುಎಸ್‌ನಲ್ಲಿ ತರಬೇತಿ ಪಡೆಯುತ್ತಿರುವ ಮೀರಾಬಾಯಿ ಚಾನು, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಈಶಾನ್ಯ ರಾಜ್ಯದ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಸಾಧ್ಯವಾಗುತ್ತಿಲ್ಲ, ಈ ಹಿಂಸಾಚಾರದಿಂದ ಕ್ರೀಡಾಪಟುಗಳ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾಗಿ ಇಲ್ಲಿಗೆ 3 ತಿಂಗಳು ಆಗಿದೆ. ಇನ್ನೂ ಇಲ್ಲಿ ಶಾಂತಿ ಸ್ಥಾಪನೆಯಾಗಿಲ್ಲ. ಈ ಸಂಘರ್ಷದಿಂದಾಗಿ ಹಲವಾರು ಆಟಗಾರರಿಗೆ ತರಬೇತಿ ನೀಡಲು ಸಾಧ್ಯವಾಗಲಿಲ್ಲ, ಇನ್ನೂ ಇದರಿಂದ ಮಕ್ಕಳ ಶಿಕ್ಷಣಕ್ಕೂ ಅಡ್ಡಿಯಾಗಿದೆ. ಅನೇಕರು ಜೀವ ಕಳೆದುಕೊಂಡಿದ್ದಾರೆ. ಇದರ ಜತೆಗೆ ಅನೇಕ ಮನೆಗಳು ನಾಶವಾಗಿವೆ ಎಂದು ಚಾನು ತನ್ನ ಟ್ವಿಟರ್ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ.

ವೀಡಿಯೊ ಮೂಲಕ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಅವರಿಗೆ ನಾನು ಮನವಿ ಮಾಡುವೇ, ನನ್ನ ರಾಜ್ಯದ ಪರಿಸ್ಥಿತಿ ನೋಡಿ ನನಗೆ ಇಲ್ಲಿ ತರಬೇತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಅದಷ್ಟು ಬೇಗ ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಮತ್ತೆ ಮಣಿಪುರದಲ್ಲಿ ಶಾಂತಿ ಮರಳಿ ತರುವಂತೆ ಮನವಿ ಮಾಡಿಕೊಂಡಿದ್ದಾರೆ.

ಮುಂಬರುವ ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಗೇಮ್ಸ್‌ಗೆ ತಯಾರಿ ನಡೆಸಲು ನಾನು ಪ್ರಸ್ತುತ ಯುಎಸ್‌ಎಯಲ್ಲಿ ತರಬೇತಿ ಪಡೆಯುತ್ತಿದ್ದರೂ ಮಣಿಪುರದಲ್ಲಿ ನನ್ನ ಮನೆ ಇದೆ. ನಾನು ಮಣಿಪುರದಲ್ಲಿಲ್ಲದಿದ್ದರೂ, ಈ ಸಂಘರ್ಷ ಯಾವಾಗ ಕೊನೆಗೊಳ್ಳುತ್ತದೆ ಎಂದು ನಾನು ಯಾವಾಗಲೂ ಯೋಚಿಸುತ್ತೇನೆ ಎಂದು ವೀಡಿಯೊದಲ್ಲಿ ಹೇಳಿದ್ದಾರೆ.