ಗೊಲ್ಲರದೊಡ್ಡಿ ಅಪಘಾತ ಪ್ರಕರಣ – ರಸ್ತೆಗೆ ಹಂಪ್ ಹಾಕುವಂತೆ ಮಗು ಶವ ಇಟ್ಟು ಪ್ರತಿಭಟನೆ

ರಾಮನಗರ: ಟ್ಯೂಶನ್ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಸೋಮವಾರ ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ರಸ್ತೆ ಮಧ್ಯೆ ಮಗುವಿನ ಶವ ಇಟ್ಟು, ರಸ್ತೆಗೆ ಹಂಪ್ ಹಾಕುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.ರಾಮನಗರ- ಮಾಗಡಿ ಮುಖ್ಯರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು, ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 9ರಂದು ಟ್ಯೂಶನ್ ಮುಗಿಸಿ ಬರುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದಿದ್ದು, ಘಟನೆಯ ಪರಿಣಾಮ ಮೂವರು ಮೃತಪಟ್ಟಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮತ್ತೊಂದು ಮಗು ಮೃತಪಟ್ಟ ಹಿನ್ನೆಲೆ ವಾಹನಗಳ ವೇಗಕ್ಕೆ ಕಡಿವಾಣ ಹಾಕಿ ಅಪಘಾತ ತಪ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಮಗುವಿನ ಶವವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.ಪ್ರತಿಭಟನಾ ಸ್ಥಳಕ್ಕೆ ಎಸಿ ಶ್ರೀಬಿಜಾಯ್ ಭೇಟಿ ನೀಡಿ ಗ್ರಾಮಸ್ಥರ ಮನವಿಯನ್ನು ಆಲಿಸಿದ್ದು, ರಸ್ತೆಗೆ ಹಂಪ್‌ಗಳ ನಿರ್ಮಾಣಕ್ಕೆ ಕ್ರಮವಹಿಸುವ ಭರವಸೆಯನ್ನು ನೀಡಿದ್ದಾರೆ. ಅಲ್ಲದೇ ಗ್ರಾಮಸ್ಥರ ಮನವೊಲಿಸಿ ಪ್ರತಿಭಟನೆ ವಾಪಸ್ ಪಡೆದು ಮಗುವಿನ ಅಂತ್ಯಸಂಸ್ಕಾರ ನೆರವೇರಿಸುವಂತೆ ಮನವಿ ಮಾಡಿಕೊಂಡರು. ಎಸಿ ಭರವಸೆ ಹಿನ್ನೆಲೆ ಗ್ರಾಮಸ್ಥರು ಪ್ರತಿಭಟನೆ ವಾಪಸ್ ಪಡೆದಿದ್ದಾರೆ.