ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ಸಮುದಾಯದ ಕುಂದು ಕೊರತೆಗಳ ಬಗ್ಗೆ ಸಭೆ

ದಾಂಡೇಲಿ : ಪೊಲೀಸ್ ಇಲಾಖೆಯ ಆಶ್ರಯದಡಿ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಶಿವಾನಂದ ಕಟಗಿಯವರ ಅಧ್ಯಕ್ಷತೆಯಡಿ ಎಸ್ಸಿ/ಎಸ್ಟಿ ಸಮುದಾಯದ ಕುಂದು ಕೊರತೆಗಳ ಬಗ್ಗೆ ಸಭೆಯು ಭಾನುವಾರ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಹಾಗೂ ಎಸ್ಸಿ/ಎಸ್ಟಿ ಸಮುದಾಯದವರ ವಿವಿಧ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಡಿವೈಎಸ್ಪಿ ಶಿವಾನಂದ ಕಟಗಿಯವರು ಸಭೆಯಲ್ಲಿ ವಿವಿಧ ಸಮಸ್ಯೆಗಳ ಬಗ್ಗೆ ಗಮನಕ್ಕೆ ತರಲಾಗಿದ್ದು, ಆಯಾಯ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರುವ ಕಾರ್ಯವನ್ನು ಮಾಡುತ್ತೇವೆ. ಇನ್ನೂ ಪೊಲೀಸ್ ಇಲಾಖೆಯಿಂದ ಸಿಗಬೇಕಾದ ಕಾನೂನಿನ ನೆರವನ್ನು ಸದಾ ಪಡೆಯಬಹುದಾಗಿದ್ದು, ಯಾವುದೇ ರೀತಿಯ ಸಮಸ್ಯೆಗಳು ಆದಂತಹ ಸಂದರ್ಭದಲ್ಲಿ ಇಲಾಖೆಯ ಗಮನಕ್ಕೆ ತರುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪೊಲೀಸ್ ವೃತ್ತ ನಿರೀಕ್ಷಕರದಾದ ಭೀಮಣ್ಣ.ಎಂ.ಸೂರಿಯವರು ಎಸ್ಸಿ/ಎಸ್ಟಿ ಸಮುದಾಯದ ಕುಂದು ಕೊರತೆಗಳ ಬಗ್ಗೆ ಹಮ್ಮಿಕೊಳ್ಳುವ ಸಭೆಯ ಉದ್ದೇಶವನ್ನು ವಿವರಿಸಿದರು. ಈ ಸಂದರ್ಭದಲ್ಲಿ ಪಿಎಸ್ಐ ಐ.ಆರ್.ಗಡ್ಡೇಕರ್ ಉಪಸ್ಥಿತರಿದ್ದರು.

ಸಭೆಯಲ್ಲಿ ನಗರದ ವಿವಿಧ ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಎಸ್ಸಿ/ಎಸ್ಟಿ ಸಮುದಾಯ ಬಾಂಧವರು ಭಾಗವಹಿಸಿದ್ದರು.