ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಬೆಂಗಳೂರು ಡಿ.06: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದು, ಒಪ್ಪಿಗೆ ಹಿಂಪಡೆದ ಸರ್ಕಾರದ ಆದೇಶ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.

ಪಿಐಎಲ್​ ಅರ್ಜಿಯಲ್ಲಿ ತನಿಖೆ ಮುಂದುವರಿಸಲು ಸಿಬಿಐಗೆ ನಿರ್ದೇಶಿಸಬೇಕು. ಅಲ್ಲದೆ ಕಾಜಿ ಲೆಂಡಪ್‌ ದೋರ್ಜಿ ಪ್ರಕರಣದ ತೀರ್ಪಿನ ಉಲ್ಲೇಖಿಸಿ ಒಮ್ಮೆ‌ ಸಿಬಿಐ ತನಿಖೆಗೆ ನೀಡಿದ ಒಪ್ಪಿಗೆ ಹಿಂಪಡೆಯುವಂತಿಲ್ಲ. ಸಿಬಿಐ ತನಿಖೆ‌ ಬಹುತೇಕ ಮುಕ್ತಾಯದ ಹಂತದಲ್ಲಿದೆ‌. ಈ ಹಂತದಲ್ಲಿ ಸರ್ಕಾರ ಕಾನೂನುಬಾಹಿರ ಕ್ರಮ ಕೈಗೊಂಡಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಸರ್ಕಾರ ಹೊಂದಿದೆ ಎಂದು ಪಿಐಎಲ್ ಅರ್ಜಿ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?

2018ರಲ್ಲಿ ಡಿಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ‌ ನಡೆಸಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆ ಅಗತ್ಯವಿದೆ ಎಂಬ ಕಾರಣಕ್ಕೆ ಸಿಬಿಐ ತನಿಖೆ ನಡೆಸಲು ಬಿಎಸ್​ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಅನುಮತಿ ನೀಡಿತ್ತು. ಅಂದಿನ ಸರ್ಕಾರದ ಸಮ್ಮತಿ ಪಡೆದು ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಕೇಸ್ ದಾಖಲಿಸಿದ್ದ ಸಿಬಿಐ, 2013 ರಿಂದ 2018ರ ಅವಧಿಯಲ್ಲಿ ಗಳಿಸಿದ ಆದಾಯ, ಹಾಗೂ ವೆಚ್ಚದ ಮಾಹಿತಿ ಆಧರಿಸಿ 74.93 ಕೋಟಿ ರೂ. ಆದಾಯ ಮೀರಿ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಈ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ.

ಈ ಹಂತದಲ್ಲಿ ಸರ್ಕಾರದ ಸಮ್ಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಏಕಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿತ್ತು. ನಂತರ ಡಿಕೆ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ನೀಡಿದ ಕ್ರಮಕ್ಕೆ ತಡೆ ನೀಡಿದೆ. ಇದೀಗ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ನಡೆಸಿ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಡಿಕೆ ಶಿವಕುಮಾರ್ ಅವರಿಗೆ ಒಪ್ಪಿಗೆ ಸೂಚಿಸಿತ್ತು.

ಈ ಮಧ್ಯೆ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ‌ ನೀಡಿದ ಸಮ್ಮತಿಯನ್ನು ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿತ್ತು. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕಾನೂನು ಅಭಿಪ್ರಾಯ ಆಧರಿಸಿ ಸರ್ಕಾರ ಈ ತೀರ್ಮಾನಕ್ಕೆ ಬಂದಿತ್ತು