ವರ್ಗಾವಣೆಗೊಂಡ ಜನಮೆಚ್ಚುಗೆಯ ಸಹಾಯಕ ಆಯುಕ್ತೆ ಜಯಲಕ್ಷ್ಮೀ ರಾಯಕೋಡ ಅವರಿಗೆ ಬೀಳ್ಕೊಡುಗೆ

ಜೋಯಿಡಾ : ಕಳೆದ 2 ವರ್ಷಗಳಿಂದ ತಾಲೂಕಿನ ಅಭಿವೃದ್ಧಿಗೆ ಹಾಗೂ ಜನತೆಯ ಭಾವನೆಗಳಿಗೆ ಸ್ಪಂದಿಸಿದ ಜನಪ್ರಿಯ ಅಧಿಕಾರಿ ಎಂದು ಕರೆಸಿಕೊಂಡ ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ ಅವರನ್ನು ತಹಶೀಲ್ದಾರ್ ಕಾರ್ಯಾಲಯದಲ್ಲಿ ಶುಕ್ರವಾರ ಗೌರವಪೂರ್ವಕವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಜಯಲಕ್ಷ್ಮೀ ರಾಯಕೋಡ ಅವರು ಸರಕಾರಿ ಕೆಲಸ ದೇವರ ಕೆಲಸವೆಂದು ತಿಳಿದು ನಮಗೆ ಕೊಟ್ಟ ಜವಾಬ್ದಾರಿಯನ್ನು ನಿಷ್ಟೆಯಿಂದ ನಿಭಾಯಿಸಿಕೊಂಡು ಬಂದಿದ್ದೇನೆ. ಜೋಯಿಡಾ ತಾಲ್ಲೂಕು ಸುಸಂಸ್ಕೃತಿಕೆಯ ತಾಲೂಕಾಗಿದೆ. ಇಲ್ಲಿಯ ಜನತೆ ನೀಡಿದ ಪ್ರೀತಿ, ಆತ್ಮೀಯತೆ ಎಂದೂ ಮರೆಯಲು ಸಾಧ್ಯವಿಲ್ಲ. ಕಾರವಾರ ಉಪ ವಿಭಾಗದಲ್ಲಿ ಸೇವೆ ಸಲ್ಲಿಸಲು ಸಹಕರಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಹಾಗೂ ವಿಭಾಗ ವ್ಯಾಪ್ತಿಯ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.

ತಹಶೀಲ್ದಾರ್ ಮಂಜುನಾಥ ಮುನ್ನೋಳಿ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.