ಸೇನಾಪಡೆಗೆ ಸೇರುವ ಜಿಲ್ಲೆಯ ಯುವಕರಿಗೆ ಎಲ್ಲಾ ರೀತಿಯ ತರಬೇತಿ ಹಾಗೂ ನೆರವು : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

            ಕಾರವಾರ:- ಭಾರತೀಯ ಸೇನಾಪಡೆಯ ಅಗ್ನವೀರ್ ಗೆ ಸೇರ್ಪಡೆಯಾಗ ಬಯಸುವ ಜಿಲ್ಲೆಯ ಯುವಕರಿಗೆ ಜಿಲ್ಲಾಡಳಿತದ ವತಿಯಿಂದ ಉಚಿತ ತರಬೇತಿ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ನೆರವು ನೀಡಲಾಗುವುದು. ಸೇನಾಪಡೆ ಸೇರುವ ಮೂಲಕ ಆಕರ್ಷಕ ಸಾಹಸಮಯ ಉದ್ಯೋಗದ ಜೊತೆಗೆ ದೇಶರಕ್ಷಣೆಯ ಮಹಾನ್ ಕರ್ತವ್ಯಕ್ಕೆ ಜಿಲ್ಲೆಯ ಯುವಕರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

 ಅವರು ಇಂದು , ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಮಂಗಳೂರು ಸೇನಾ ನೇಮಕಾತಿ ಕಚೇರಿವತಿಯಿಂದ ಸೇನಾಪಡೆಯ ಅಗ್ನಿವೀರ್ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದ್ದು ಜಿಲ್ಲೆಯ ಯುವಜನತೆ ಕೂಡ ಅರ್ಜಿ ಹಾಕಬಹುದಾಗಿದ್ದು, ಫೆಬ್ರವರಿ 13 ರಿಂದ ಮಾಚ್ ð 22 ರ ವರೆಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶವಿದ್ದು, ಅರ್ಜಿ ಹಾಕಿದ ಅರ್ಹರಿಗೆ ಮೊದಲು ಲಿಖಿತ ಪರೀಕ್ಷೆ ನಂತರ ನೇಮಕಾತಿ ರ‍್ಯಾಲಿ ನಡೆಯಲಿದೆ ಎಂದರು.

 ಅಗ್ನಿವೀರ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಯುವಕರಿಗೆ ಜಿಲ್ಲೆಯ ಎಲ್ಲಾ 35 ನಾಡ ಕಚೇರಿಗಳಲ್ಲಿ ಅರ್ಜಿ ಹಾಕಲು ಅಗತ್ಯ ನೆರವು ನೀಡಲಾಗುವುದು ಅಲ್ಲದೇ ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರಿಕ್ಷೆಗೆ ಉಚಿತ ತರಬೇತಿ ನೀಡಲು ಜಿಲ್ಲೆಯಲ್ಲಿನ ಮಾಜಿ ಸೈನಿಕರ ಕಲ್ಯಾಣ ಸಂಘವು ಮುಂದೆ ಬಂದಿದ್ದು ಜಿಲ್ಲೆಯ ಯುವ ಜನತೆ ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

 ಕನಿಷ್ಠ ಎಂಟನೇ ತರಗತಿಯಿಂದ ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಡಿಪ್ಲೊಮೋ, ಐ.ಟಿ.ಐ ವಿದ್ಯಾರ್ಹತೆ ಹೊಂದಿರುವ 17.5 ರಿಂದ 21 ವರ್ಷದೊಳಗಿನ ಜಿಲ್ಲೆಯ ಯುವ ಜನತೆ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ವಿದ್ಯಾರ್ಹತೆಗೆ ಅನುಗುಣವಾಗಿ ತಾಂತ್ರಿಕ ಮತ್ತು ಸಾಮಾನ್ಯ ಕರ್ತವ್ಯಗಳಿಗೆ ನೇಮಕಾತಿ ನಡೆಯಲಿದೆ.

            ಸೇನಾಪಡೆಯ ನೇಮಕಾತಿಯು ಅತ್ಯಂತ ಪಾರದರ್ಶಕವಾಗಿದ್ದು, ಲಿಖಿತ ಪರೀಕ್ಷೆ ಮತ್ತು ದೈಹಿಕ ಅರ್ಹತೆ ಮಾತ್ರವೇ ನೇಮಕಾತಿಗೆ ಪರಿಗಣಿಸಲಿದ್ದು, ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಮಾತನ್ನು ನಂಬಿ ಮೋಸ ಹೋಗದಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಮಾಜಿ ಸೈನಿಕರು ಜಿಲ್ಲೆಯ ಅಭ್ಯರ್ಥಿಗಳಿಗೆ ತರಬೇತಿ ಮತ್ತು ನೆರವು ನೀಡಲಿದ್ದಾರೆ ಎಂದರು.

 ಜಿಲ್ಲೆಯ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸೇನಾ ನೇಮಕಾತಿಗೆ ಅರ್ಜಿ ಸಲ್ಲಿಸುವ ಮೂಲಕ ದೇಶಸೇವೆಗೆ ದೊರಕುವ ಈ ಸುವರ್ಣಾವಕಾಶವನ್ನು ಜಿಲ್ಲೆಯ ಜನತೆ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

 ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತದ್ದರು