ಜಿಲ್ಲೆಯ ಯಾವುದೇ ಮಗು ಪೊಲೀಯೋ ಲಸಿಕೆಯಿಂದ ವಂಚಿತವಾಗಬಾರದು ; ಅಪರ ಜಿಲ್ಲಾಧಿಕಾರಿ

 ಕಾರವಾರ, ಫೆ.22 :- ಮಾರ್ಚ್ 3 ರಂದು ನಡೆಯುವ ಪಲ್ಸ್ ಪೊಲಿಯೋ ಕಾರ್ಯಕ್ರಮದಲ್ಲಿ ನಿಗಧಿತ ಗುರಿಯಂತೆ ಜಿಲ್ಲೆಯ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಬೇಕು, ಯಾವುದೇ ಮಗು ಪೋಲಿಯೋ ಲಸಿಕೆ ಪಡೆಯುವದರಿಂದ ವಂಚಿತವಾಗದAತೆ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ಸೂಚಿಸಿದರು.

 ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಪಲ್ಸ್ ಪೋಲಿಯೋ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಮಾರ್ಚ್ 3 ರಂದು ನಡೆಯುವ ಪಲ್ಸ್ ಪೊಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 98,473 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ 833 ಲಸಿಕಾ ಕೇಂದ್ರಗಳನ್ನು, 32 ಟ್ರಾನ್ಸಿಸ್ಟ್ ತಂಡಗಳನ್ನು, 3630 ಲಸಿಕೆ ನೀಡುವ ಸಿಬ್ಬಂದಿ, 211 ಸೂಪರ್ ವೈಸರ್‌ಗಳನ್ನು ನಿಯೋಜಿಸಲಾಗಿದ್ದು, ಈ ಕಾರ್ಯಕ್ಕಾಗಿ 190 ವಾಹನಗಳ ಅಗತ್ಯವಿದ್ದು ಎಲ್ಲಾ ಇಲಾಖೆಗಳು ತಮ್ಮ ಅಗತ್ಯ ಸಹಕಾರ ನಿಡುವ ಮೂಲಕ ಜಿಲ್ಲೆಯಲ್ಲಿ ಪಲ್ಸ್ ಪೊಲಿಯೋ ಲಸಿಕೆ ನಿಡುವ ಸಂಪೂರ್ಣ ಗುರಿ ಸಾಧನೆಗೆ ಸಹಕರಿಸುವಂತೆ ತಿಳಿಸಿದರು.

 ಪಲ್ಸ್ ಪೊಲೀಯೋ ಕಾರ್ಯಕ್ರಮದ ಕುರಿತಂತೆ ಆಶಾ ಮತ್ತು ಅಂಗನವಾಡಿ ಕಾರ್ಯಕತೆಯರು ತಮ್ಮ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ, 5 ವರ್ಷದೊಳಗಿನ ಮಕ್ಕಳ ತಾಯಂದಿರಿಗೆ ಮಾಹಿತಿ ನೀಡುವಂತೆ ತಿಳಿಸಿದ ಅಪರ ಜಿಲ್ಲಾಧಿಕಾರಿಗಳು, ಎಲ್ಲಾ ಶಾಲೆಗಳಲ್ಲಿ ಈ ಬಗ್ಗೆ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುವಂತೆ ತಿಳಿಸಿದರು.

 ಪೋಲಿಯೋ ಬೂತ್ ಗಳನ್ನು ತೆರೆಯಲು ಶಿಕ್ಷಣ ಇಲಾಖೆ ವತಿಯಿಂದ ಶಾಲಾ ಕೊಠಡಿಗಳ ವ್ಯವಸ್ಥೆ ಮಾಡುವಂತೆ ಹಾಗೂ ಪಲ್ಸ್ ಪೋಲೀಯೋ ಕಾರ್ಯಕ್ರಮದ ಬಗ್ಗೆ ಪೋಷಕರು-ಶಿಕ್ಷಕರ ಸಭೆಯಲ್ಲಿ ಮಾಹಿತಿ ನೀಡುವಂತೆ ಮತ್ತು ವಿದ್ಯಾರ್ಥಿಗಳ ಮೂಲಕ ಪೋಷಕರಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

 ಪೋಲಿಯೋ ಲಸಿಕೆಗಳನ್ನು ಶೀಥಲೀಕರಣ ವ್ಯವಸ್ಥೆಯಲ್ಲಿಡುವುದು ಅಗತ್ಯವಿರುವುದರಿಂದ ಹೆಸ್ಕಾಂ ವತಿಯಿಂದ ಫೆಬ್ರವರಿ 25 ರಿಂದ ಲಸಿಕಾ ಕಾರ್ಯಕ್ರಮ ಮುಕ್ತಾಯವಾಗುವವರೆಗೆ ವಿದ್ಯುತ್ ಕಡಿತ ಮಾಡದಂತೆ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಕಾರ್ಯಕ್ರಮಕ್ಕೆ ಅಗತ್ಯವಿರುವ ವಾಹನಗಳ ವ್ಯವಸ್ಥೆ ಮಾಡುವಂತೆ ತಿಳಿಸಿದರು.

 ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯಕ್ರಮದ ಕುರಿತಂತೆ ವ್ಯಾಪಕ ಜಾಗೃತಿ ಮೂಡಿಸಿ, ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಬೇಕು. ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು ಮತ್ತು ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವವರಿಗ ತಮ್ಮ ಮಕ್ಕಳಿಗೆ ತಪ್ಪದೇ ಪೊಲೀಯೋ ಲಸಿಕೆ ಹಾಕಿಸುವಂತೆ ತಿಳಿಸಬೇಕು ಎಂದರು.

 ರೋಟರಿ, ಲಯನ್ಸ್, ರೆಡ್ ಕ್ರಾಸ್ ಸೇರಿದಂತೆ ಎಲ್ಲಾ ಸ್ವಯಂ ಸೇವಾ ಸಂಘಟನೆಗಳು ಜಿಲ್ಲೆಯಲ್ಲಿ ನಡೆಯುವ ಪಲ್ಸ್ ಪೋಲೀಯೋ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.

 ಸಭೆಯಲ್ಲಿ ಕಾರವಾರ ಉಪವಿಭಾಗಾಧಿಕಾರಿ ಕನಿಷ್ಕ, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ.ಸಿದ್ದಲಿಂಗಯ್ಯ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ್, ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸ್ವಯಂ ಸೇವಾ ಸಂಘಟನೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.