ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ಹೈಕೋರ್ಟ್ ಆದೇಶ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ. ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಲಾಗಿದೆ.

ಬೆಂಗಳೂರು, ಮಾರ್ಚ್​​ 18: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ (Kannada) ಬಳಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ. ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ವ್ಯಾಪಾರ ಮಾಡುವಾಗ ಕನ್ನಡ ನಾಮಫಲಕವಿರಬೇಕು ಎಂದು ಹೈಕೋರ್ಟ್ ಹೇಳಿದೆ.

ಶೇಕಡಾ 60ರಷ್ಟು ಕನ್ನಡ ನಾಮಫಲಕ ಹಾಕಿದರೆ ಸಮಸ್ಯೆ ಏನು ಮಳಿಗೆಗಳ ಸಂಘದ ಪರ ವಕೀಲರಿಗೆ ನ್ಯಾ.ಎಂ.ನಾಗಪ್ರಸನ್ನ ಪ್ರಶ್ನೆ ಮಾಡಿದ್ದು, ‘ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022’ ಜಾರಿ ಸಮರ್ಪಕವಾಗಿಲ್ಲ. ಜಾರಿಯ ದಿನಾಂಕದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ. ಡಿಜಿಟಲ್ ನಾಮಫಲಕಗಳನ್ನು ಬದಲಿಸಲು ಕಾಲಾವಕಾಶ ಬೇಕು. ನಾಮಫಲಕದಲ್ಲಿ ಶೇ.60ರಷ್ಟು ಕನ್ನಡವಿಲ್ಲದಿದ್ದರೆ ಮುಚ್ಚಲಾಗುತ್ತಿದೆ ಎಂದು ಸರ್ಕಾರದ ಸುತ್ತೋಲೆ ಪ್ರಶ್ನಿಸಿ ವ್ಯಾಪಾರಿಗಳ ಸಂಘದಿಂದ ವಾದ ಮಾಡಲಾಗಿದೆ.‘

ಕಾಯ್ದೆ ಜಾರಿ ಬಗ್ಗೆ ಗೆಜೆಟ್ ಆಧಿಸೂಚನೆ ವಿವರ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಸೂಚನೆ ನೀಡಿದೆ.

ರಾಜ್ಯದ ಅಂಗಡಿ ಮುಂಗಟ್ಟು ಮತ್ತು ವ್ಯಾಪಾರ ಮಳಿಗೆಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಬಳಕೆ ಮಾಡಬೇಕು. ಈ ಸಂಬಂಧ ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರಿವಾಜ್ಞೆ ಹೊರಡಿಸಿತ್ತು. ಬಳಿಕ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ, 2024 ಅನ್ನು ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗಿತ್ತು.

ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಲು ವಿಫಲವಾದರೆ ದಂಡ ವಿಧಿಸಲಾಗುವುದು ಮತ್ತು ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಧಾನಸಭೆಯಲ್ಲಿ ಇತ್ತೀಚೆಗೆ ಹೇಳಿದ್ದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಇರುವಂತೆ ನೋಡಿಕೊಳ್ಳಲು ಬಿಬಿಎಂಪಿ ಫೆಬ್ರವರಿ 28 ಕೊನೆಯ ಗಡುವು ವಿಧಿಸಿತ್ತು ಆದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಿದ್ದರು.