ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್​​

ಬೆಂಗಳೂರು, ಜೂನ್​ 18: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಅಕ್ಕ (ಭವಾನಿ ರೇವಣ್ಣ) ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾ. ಕೃಷ್ಣ ಎಸ್​ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಹೇಳಿತು.

ಏನಿದು ಪ್ರಕರಣ?

ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಹೆಚ್​ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು.

ಹೆಚ್​ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಸದ್ಯ ಹೆಚ್​ಡಿ ರೇವಣ್ಣ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್​ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್​ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್​ ಕೊಟ್ಟಿತ್ತು. ನೋಟಿಸ್​ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕತಿಸಿತ್ತು.

ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್​​ನ ಏಕ ಸದಸ್ಯ ಪೀಠ ಈ ಹಿಂದೆ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಕಾಯ್ದಿರಿಸಿತ್ತು. ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.