ಸರಿಯಾದ ಸಮಯಕ್ಕೆ ಬಸ್ಸು ಬಿಡಿ – ದೊಡ್ಡಬಳ್ಳಾಪುರದಲ್ಲಿ ದಿಢೀರ್‌ ವಿದ್ಯಾರ್ಥಿಗಳ ಪ್ರತಿಭಟನೆ

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಿಂದ ಮಹಾನಗರ ಬೆಂಗಳೂರಿಗೆ ಬೆಳ್ಳಂಬೆಳಿಗ್ಗೆ ಸಕಾಲಕ್ಕೆ ಸರ್ಕಾರಿ ಬಸ್ಸುಗಳಿಲ್ಲದೇ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಪ್ರತಿನಿತ್ಯ ಪರದಾಡುವಂತಾಗಿದೆ.

ಪ್ರತಿನಿತ್ಯ ಸಮಸ್ಯೆ ಅನುಭವಿಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಇಂದು ಬೆಳಗ್ಗೆ ದೊಡ್ಡಬಳ್ಳಾಪುರ ನಗರದ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ತಡೆದು ಪ್ರತಿಭಟನೆ ನಡೆಸಿದರು. 

ಮಾಸಿಕ ಹಾಗೂ ವಾರ್ಷಿಕ ಪಾಸ್‌ಗಳನ್ನು ನಾವು ಪಡೆದುಕೊಂಡಿದ್ದೇವೆ. ಆದರೆ ಕೆಲ ದಿನಗಳಿಂದ ನಮಗೆ ಬೆಳಗ್ಗೆ ಸೂಕ್ತ ಸಮಯಕ್ಕೆ ಬಸ್ಸುಗಳೇ ಬರುತ್ತಿಲ್ಲ. ಹಲವು ಬಾರಿ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಸಮಸ್ಯೆ ಬಗೆಹರಿಸುತ್ತಿಲ್ಲ. ಹೆಚ್ಚುವರಿ ಬಸ್ಸುಗಳನ್ನು ಬಿಡುತ್ತಿಲ್ಲ. ಇದರಿಂದಾಗಿ ಸರಿಯಾದ ಸಮಯಕ್ಕೆ ಕಾಲೇಜುಗಳಿಗೆ, ಕೆಲಸಕ್ಕೆ ಸಹ ಹಾಜರಾಗಲು ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ದೊಡ್ಡಬಳ್ಳಾಪುರ ನಗರ ಪೊಲೀಸರು ಪ್ರತಿಭಟನಾನಿರತರ ಮನವೊಲಿಸುವ ಕೆಲಸ ಮಾಡಿದರು.