ಜಿಲ್ಲೆಯಲ್ಲಿ ವ್ಯಾಪಕ ಮಳೆ, 7 ಕಾಳಜಿ ಕೇಂದ್ರಗಳಲ್ಲಿ 255 ಜನರಿಗೆ ಆಶ್ರಯ

ಕಾರವಾರ: ಜಿಲ್ಲೆಯಲ್ಲಿ ಶುಕ್ರವಾರವೂ ಕೂಡಾ ವ್ಯಾಪಕವಾಗಿ ಮಳೆ ಸುರಿದಿದ್ದು, ಮಳೆಯಿಂದ ತಗ್ಗು ಪ್ರದೇಶದಲ್ಲಿರುವ ಒಟ್ಟು 128 ಕುಟುಂಬಗಳ 255 ಮಂದಿಯನ್ನು ಸುರಕ್ಷಿತ ಸ್ಥಳಗಳಲ್ಲಿ ತೆರದಿರುವ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣೆಯ 2 ತಂಡಗಳು ಮಂಕಿಯ ಪ್ರಾಕೃತಿಕ ವಿಕೋಪ ಕೇಂದ್ರದಲ್ಲಿ ತಂಗಿದ್ದು, ಯಾವುದೇ ತುರ್ತು ಕಾರ್ಯಚರಣೆಗೆ ಸಕಲ ರೀತಿಯಲ್ಲಿ ಈ ತಂಡಗಳು ಸನ್ನದ್ದವಾಗಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ಹೊನ್ನಾವರ ಮತ್ತು ಕುಮಟಾ ತಾಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ಅವರಿಗೆ ಸಮೀಪದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಹೊನ್ನಾವರದಲ್ಲಿ 6 ಮತ್ತು ಕುಮಟಾ ದಲ್ಲಿ 1 ಸೇರಿದಂತೆ ಒಟ್ಟು 7 ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ.

ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ.
ಶುಕ್ರವಾರ, ಕಾಳಿ ನದಿ ವ್ಯಾಪ್ತಿಯ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮಳೆ ಅಧಿಕವಾಗಿದ್ದು, ಒಳ ಹರಿವಿನ ಪ್ರಮಾಣ ಏರಿಕೆಯಾಗಿ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣವು ಜಿಲ್ಲಾಡಳಿತ ನಿಗಧಿಪಡಿದ ಗರಿಷ್ಠ ಮಟ್ಟ 30 ಮೀ. ತಲುಪಿದ್ದರಿಂದ , ಜಲಾಶಯದ 4 ಗೇಟ್ ಗಳನ್ನು ತೆರೆದು 6000 ಕೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 1 ಮನೆಗೆ ತೀವ್ರ ಮತ್ತು 3 ಮನೆಗಳಿಗೆ ಭಾಗಶ: ಹಾನಿಯಾಗಿದೆ.

ಹೆಚ್ಚಿನ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಕಾರವಾರ, ಅಂಕೊಲಾ, ಭಟ್ಕಳ, ಹೊನ್ನಾವರ ಮತ್ತು ಕುಮಟಾ ತಾಲೂಕಿನ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜಿವ ಹಾನಿ ಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಉಚಿತ ತುರ್ತ ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ , ಮೆಸೆಜ್, ವಾಟ್ಪಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.