ಮಾತು ನಿಲ್ಲಿಸಿ ಚಿರನಿದ್ರೆಗೆ ಜಾರಿದ ಅಪರ್ಣಾ!

ಬೆಂಗಳೂರು: ಕ್ಯಾನ್ಸರ್‌ ಕಾಯಿಲೆಯಿಂದಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್‌ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್‌ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು.

ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ. ಈ ಮೂಲಕ ತಮ್ಮ ಕನ್ನಡ ಸೇವೆಯನ್ನು ಮುಂದುವರಿಸಿದ್ದಾರೆ.

ಕಿರುತೆರೆಯಲ್ಲಿ ʻಮೂಡಲಮನೆʼ, ʻಮುಕ್ತʼ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆʼಗೆ ಧ್ವನಿ ಗೂಡಿಸಿದ್ದರು.