ರೈತರು, ಸಾರ್ವಜನಿಕರಿಂದ ಸಿಎಂ ಸಿದ್ಧರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ

ಚಾಮರಾಜನಗರ, ಜುಲೈ.13: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಸಿಎಂ ಅವರಿಗೆ ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಆದರೆ ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ ಪತ್ತೆಯಾಗಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಂದ ಸಾರ್ವಜನಿಕರಿಂದ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮನವಿ ಪತ್ರಗಳು ಬಿದ್ದಿವೆ. ಗಂಟೆಗಟ್ಟಲೆ ಕಾದು ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ರೆ ಸಿಎಂ ಜಿಲ್ಲೆಗೆ ಬಂದಾಗ ಕಪ್ಪುಬಾವುಟ ಪ್ರದರ್ಶಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ತಮ್ಮ ಮನವಿ ಪತ್ರಗಳನ್ನು ಕಸದ ಬುಟ್ಟಿಗೆ ಎಸೆಯಬೇಕಿದ್ದರೆ ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರು ಯಾಕೆ? ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳು ಸಲ್ಲಿಸುವ ಮನವಿ ಗಳ ಕಥೆ ಏನು? ಎಂದು ಆಕ್ರೋಶ ಹೊರ ಹಾಕಿದ್ದಾರೆ.