ಜೆಡಿಎಸ್‌-ಬಿಜೆಪಿ ಮೈತ್ರಿ ಪಾಲಾದ ಮಂಡ್ಯ ನಗರಸಭೆ ಗದ್ದುಗೆ; ಅಧ್ಯಕ್ಷರಾಗಿ ನಾಗೇಶ್ ಆಯ್ಕೆ

ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಮಂಡ್ಯ ನಗರಸಭೆ ಗದ್ದುಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಪಾಲಾಗಿದೆ.

ಇಂದು ನಡೆದ ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆಯಾದರು. ಅಧಿಕಾರ ಹಿಡಿಯಲು ಎರಡು ಪಕ್ಷದವರಿಂದ ತಂತ್ರ-ಪ್ರತಿತಂತ್ರ ರೂಪಿಸಲಾಗಿತ್ತು.

ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದ ಸಂಸದ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ ಓರ್ವ ಸದಸ್ಯನನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡು ಮಂಡ್ಯ ನಗರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಮಂಡ್ಯ ನಗರಸಭೆ ಗದ್ದುಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಪಾಲಾಗುತ್ತಿದ್ದಂತೆ ಜೆಡಿಎಸ್‌-ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ‌ ಸಂಭ್ರಮಿಸಿದರು. ಈ ವೇಳೆ ಸಂಸದ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಜೈಕಾರ ಕೂಗಿ ಹರ್ಷ ವ್ಯಕ್ತಪಡಿಸಿದರು.