11 ವರ್ಷದ ಬಾಲಕ ಹೃದಯಾಘಾತದಿಂದ ಸಾವು

ಹಾಸನ, ಸೆ.21: ಹೃದಯಾಘಾತದಿಂದ11 ವರ್ಷದ ಬಾಲಕ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್​ಗೆ ನಿನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವಿನಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದ. ಮನೆಯಲ್ಲಿರುವಾಗ ಏಕಾಏಕಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ.

ಮಲಗಿದ್ದ ಮಗನನ್ನು ಮಾತನಾಡಿಸಲು ಕಾವ್ಯಶ್ರೀ ಮುಂದಾದಾಗ ಮಗ ಮಾತನಾಡಿಲ್ಲ. ಎಚ್ಚರವೂ ಆಗಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ. ಚಿಕ್ಕವಯಸ್ಸಿನಲ್ಲೇ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಮನೆ ಮಾಡಿಕೊಟ್ಟಿದೆ.