
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಬ್ರಿಟನ್ನ ಕಿಂಗ್ ಚಾರ್ಲ್ಸ್ III ಅವರೊಂದಿಗೆ ಮಾತನಾಡಿದ್ದು, ಭಾರತ-ಯುಕೆ ಬಾಂಧವ್ಯವನ್ನು ಬಲಪಡಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು. ಕಾಮನ್ವೆಲ್ತ್, ಹವಾಮಾನ ಕ್ರಮ ಮತ್ತು ಸುಸ್ಥಿರತೆ ಸೇರಿದಂತೆ ಪರಸ್ಪರ ನಂಬಿಕೆಯ ಹಲವಾರು ವಿಷಯಗಳ ಕುರಿತು ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. “ಇಂದು ಕಿಂಗ್ ಚಾರ್ಲ್ಸ್ III ಅವರೊಂದಿಗೆ ಮಾತನಾಡಲು ಸಂತೋಷವಾಗಿದೆ. ಭಾರತ-ಯುಕೆ ಸಂಬಂಧಗಳನ್ನು ಬಲಪಡಿಸುವ ಬದ್ಧತೆಯನ್ನು ನಾನು ಪುನರುಚ್ಚರಿಸಿದೆ. ಕಾಮನ್ವೆಲ್ತ್, ಹವಾಮಾನ ಕ್ರಮ ಮತ್ತು ಸುಸ್ಥಿರತೆ ಸೇರಿದಂತೆ ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು. ಅವರಿಗೆ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಬಯಸುತ್ತೇನೆ” ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕಿಂಗ್ ಚಾರ್ಲ್ಸ್ III ನಡುವಿನ ಸಂಭಾಷಣೆಯು ಕಾಮನ್ವೆಲ್ತ್ ರಾಷ್ಟ್ರಗಳ ಬಗ್ಗೆ ಚರ್ಚೆಯನ್ನು ಸಹ ಒಳಗೊಂಡಿತ್ತು. ಸಮೋವಾದಲ್ಲಿ ಇತ್ತೀಚೆಗೆ ನಡೆದ ಕಾಮನ್ವೆಲ್ತ್ ಮುಖ್ಯಸ್ಥರ ಸಭೆಯ (CHOGM) ಫಲಿತಾಂಶಗಳ ಕುರಿತು ಇಬ್ಬರೂ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಭಾರತ ಮತ್ತು ಯುಕೆ ಎರಡೂ ಕಾಮನ್ವೆಲ್ತ್ನ ಪ್ರಮುಖ ಸದಸ್ಯರಾಗಿದ್ದಾರೆ.
ಹಾಗೇ, ಅವರು ಕ್ರಿಸ್ಮಸ್ ಮತ್ತು ಹೊಸ ವರ್ಷದ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಕಿಂಗ್ ಚಾರ್ಲ್ಸ್ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಧಾನಿ ಮೋದಿ ತಮ್ಮ ಹೃತ್ಪೂರ್ವಕ ಹಾರೈಕೆಗಳನ್ನು ವ್ಯಕ್ತಪಡಿಸಿದರು.
ಇದಲ್ಲದೆ, ಬ್ರಿಟನ್ನ ರಾಜ ಚಾರ್ಲ್ಸ್ III ಮುಂದಿನ ದಿನಗಳಲ್ಲಿ ಭಾರತಕ್ಕೆ ಅಧಿಕೃತ ಭೇಟಿಗೆ ಆಗಮಿಸಲಿದ್ದಾರೆ. ಈ ವರ್ಷದ ಆರಂಭದಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾದ್ದರಿಂದ ಅವರು ತಮ್ಮ ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಬಕಿಂಗ್ಹ್ಯಾಮ್ ಅರಮನೆಯು ಫೆಬ್ರವರಿಯಲ್ಲಿ ಕಿಂಗ್ ಚಾರ್ಲ್ಸ್ ಅವರ ಕ್ಯಾನ್ಸರ್ ರೋಗನಿರ್ಣಯವನ್ನು ಬಹಿರಂಗಪಡಿಸಿತ್ತು.