
ನವದೆಹಲಿ, ಏಪ್ರಿಲ್ 27: ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಸಿಗುತ್ತೆ, ಉಗ್ರರಿಗೆ ಕಠಿಣ ಶಿಕ್ಷೆ ಕೊಟ್ಟೇ ಕೊಡುತ್ತೇವೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ. ದೇಶದ 140 ಕೋಟಿ ಜನರ ಒಗ್ಗಟ್ಟು, ಸಂಕಲ್ಪದಿಂದ ಉಗ್ರರನನ್ನು ಸದೆಬಡಿದು ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳಿದರು. ಇಡೀ ವಿಶ್ವವೇ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗಿದೆ ಎಂದರು.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭೀಕರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉಲ್ಲೇಖಿಸಿದ್ದಾರೆ.ಕಾಶ್ಮೀರದ ಪ್ರಗತಿಯಿಂದ ಕೆಲವು ಶತ್ರುಗಳು ಸಂತೋಷವಾಗಿಲ್ಲ. ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ಘಟನೆಯು ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖಿತನನ್ನಾಗಿ ಮಾಡಿದೆ.
ಈ ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ನಂತರ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ತಿಳಿದಿದೆ. ಪಹಲ್ಗಾಮ್ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನಾ ಚಟುವಟಿಕೆಯ ಹತಾಶೆಯನ್ನು ತೋರಿಸುತ್ತದೆ, ಅವರ ಹೇಡಿತನವನ್ನು ತೋರಿಸುತ್ತದೆ.
ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈಗ ತಾನೇ ಎಲ್ಲಾ ವಿಚಾರಗಳಲ್ಲೂ ಸಮೃದ್ಧವಾಗಿರುವ ಕಾಶ್ಮೀರವನ್ನು ಹಳೆಯ ಪರಿಸ್ಥಿತಿಗೆ ತಂದು ನಿಲ್ಲಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ.
ಕಾಶ್ಮೀರದಲ್ಲಿ ಶಾಂತಿ ಮರಳುತ್ತಿದ್ದ ಸಮಯದಲ್ಲಿ, ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿತ್ತು, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿದ್ದವು, ಪ್ರಜಾಪ್ರಭುತ್ವ ಬಲಗೊಳ್ಳುತ್ತಿತ್ತು, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬಂದಿತ್ತು, ಜನರ ಆದಾಯ ಹೆಚ್ಚುತ್ತಿತ್ತು, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದವು. ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ಶತ್ರುಗಳಿಗೆ ಇದು ಇಷ್ಟವಾಗಲಿಲ್ಲ.
ಈ ಭಯೋತ್ಪಾದಕ ದಾಳಿಯ ನಂತರ, ಪ್ರಪಂಚದಾದ್ಯಂತ ನಿರಂತರವಾಗಿ ಸಂತಾಪ ಸೂಚಿಸಲಾಗುತ್ತಿದೆ. ಜಾಗತಿಕ ನಾಯಕರು ಕೂಡ ನನಗೆ ಕರೆ ಮಾಡಿದ್ದಾರೆ, ಪತ್ರ ಬರೆದಿದ್ದಾರೆ. ಈ ಘೋರ ಭಯೋತ್ಪಾದಕ ದಾಳಿಯನ್ನು ಎಲ್ಲರೂ ಬಲವಾಗಿ ಖಂಡಿಸಿದ್ದಾರೆ.
ಸಂತ್ರಸ್ತ ಕುಟುಂಬಗಳಿಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ ಎಂದು ನಾನು ಮತ್ತೊಮ್ಮೆ ಭರವಸೆ ನೀಡುತ್ತೇನೆ. ಹಾಗೆಯೇ ಈ ದಾಳಿಯ ಅಪರಾಧಿಗಳು ಮತ್ತು ಸಂಚುಕೋರರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭೀಕರ ದಾಳಿ ನಡೆಯಿತು. ಈ ದಾಳಿಯಲ್ಲಿ ಇಬ್ಬರು ವಿದೇಶಿ ಪ್ರವಾಸಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಪುಲ್ವಾಮಾ ದಾಳಿಯ ನಂತರದ ಅತ್ಯಂತ ದೊಡ್ಡ ದಾಳಿ ಇದಾಗಿದೆ.
ಮನ್ ಕಿ ಬಾತ್ ಮೂಲಕ ಪ್ರಧಾನಿ ಮೋದಿ, ಕಳೆದ ತಿಂಗಳು ಮ್ಯಾನ್ಮಾರ್ನಲ್ಲಿ ವಿನಾಶಕಾರಿ ಭೂಕಂಪ ಸಂಭವಿಸಿದೆ ಎಂದು ಹೇಳಿದರು. ಭಾರತವು ಮ್ಯಾನ್ಮಾರ್ ಜನರಿಗಾಗಿ ತಕ್ಷಣವೇ ಆಪರೇಷನ್ ಬ್ರಹ್ಮವನ್ನು ಪ್ರಾರಂಭಿಸಿತು. ಆಪರೇಷನ್ ಬ್ರಹ್ಮದಲ್ಲಿ ಭಾಗವಹಿಸಿದ ಪ್ರತಿಯೊಬ್ಬರ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ.
‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನವು ಆ ತಾಯಿಗೆ ಸಮರ್ಪಿತವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಅಭಿಯಾನವು ಜೂನ್ 5 ರಂದು ವಿಶ್ವ ಪರಿಸರ ದಿನದಂದು ಒಂದು ವರ್ಷವನ್ನು ಪೂರ್ಣಗೊಳಿಸುತ್ತದೆ. ಈ ಒಂದು ವರ್ಷದಲ್ಲಿ ದೇಶಾದ್ಯಂತ 1.4 ಶತಕೋಟಿಗೂ ಹೆಚ್ಚು ಮರಗಳನ್ನು ನೆಡಲಾಗಿದೆ. ಹಾಗೆಯೇ ಬಾಗಲಕೋಟೆಯ ಶ್ರೀಶೈಲ್ ಎಂಬುವವರು ಆ ಬಿಸಿಲಲ್ಲೂ ಸೇಬುವನ್ನು ಬೆಳೆದು ಅಚ್ಚರಿ ಮೂಡಿಸಿದ್ದಾರೆ ಎಂದು ಅವರ ಕೆಲಸವನ್ನು ಶ್ಲಾಘಿಸಿದರು.
‘ಮನ್ ಕಿ ಬಾತ್’ ಕಾರ್ಯಕ್ರಮವು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್ ಸೇರಿದಂತೆ 11 ವಿದೇಶಿ ಭಾಷೆಗಳನ್ನು ಹೊರತುಪಡಿಸಿ 22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳಲ್ಲಿ ಪ್ರಸಾರವಾಗುತ್ತದೆ.


