ಪಹಲ್ಗಾಮ್ ದಾಳಿ ಕುರಿತು ಅಪಹಾಸ್ಯ, ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್​ ಚಾನೆಲ್​ಗಳಿಗೆ ನಿಷೇಧ

ನವದೆಹಲಿ, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದ ನೂರಾರು ಪಾಕಿಸ್ತಾನಿ ಯೂಟ್ಯೂಬ್​ ಚಾನೆಲ್​ ಗಳನ್ನು ಭಾರತ ನಿಷೇಧಿಸಿದೆ. ಈ ಮಾಹಿತಿಯನ್ನು ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ ಪತ್ರಕರ್ತೆಯಾದ ಆರ್​ಜೂ ಕಾಜ್ಮೀ ಖಾತೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದ್ದರು.

ಲಷ್ಕರ್​-ಎ-ತೊಯ್ಬಾ ಇದರ ಹೊಣೆ ಹೊತ್ತುಕೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನದ ಯೂಟ್ಯೂಬ್ ಚಾನೆಲ್​ಗಳಲ್ಲಿ ಭಾರತದ ಬಗ್ಗೆ ಹಾಗೂ ನಡೆದಿರುವ ಘಟನೆಯನ್ನು ತಿರುಚುವಂತಹ ವರದಿಗಳು ಪ್ರಸಾರವಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರವು ಸೂಕ್ತ ಕ್ರಮ ಕೈಗೊಂಡಿದ್ದು, ನೂರಕ್ಕೂ ಅಧಿಕ ಪಾಕಿಸ್ತಾನಿ ಯೂಟ್ಯೂಬ್​ ಚಾನೆಲ್​ಗಳನ್ನು ನಿಷೇಧಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ, ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ತಪ್ಪು ಮಾಹಿತಿ, ಗೊಂದಲದ ಅಪಹಾಸ್ಯದ ತಾಣವಾಗಿ ಮಾರ್ಪಟ್ಟಿದೆ. ಮೃತರು ಹಾಗೂ ಭಾರತೀಯ ಸೈನಿಕರನ್ನು ಅಪಹಾಸ್ಯ ಮಾಡುವುದರಿಂದ ಹಿಡಿದು ದಾಳಿಗೆ ಪ್ರಧಾನಿ ಮೋದಿಯವರನ್ನು ದೂಷಿಸುವವರೆಗೆ ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದರು.

ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಭಾರತೀಯ ಸೇನಾ ಸಿಬ್ಬಂದಿಯನ್ನೂ ಗುರಿಯಾಗಿಸಲಾಗಿತ್ತು, ಕೆಲವು ಪೋಸ್ಟ್‌ಗಳು ಜೀವ ಉಳಿಸುವುದಕ್ಕಿಂತ ರೀಲ್‌ಗಳನ್ನು ಚಿತ್ರೀಕರಿಸುವುದರ ಮೇಲೆ ಹೆಚ್ಚು ಗಮನಹರಿಸಿವೆ ಎಂದು ಸುಳ್ಳು ಆರೋಪಿಸಿದ್ದವು.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಸೈಫುಲ್ಲಾ.

ಸೈಫುಲ್ಲಾ ಖಾಲಿದ್​ನನ್ನು ಸೈಫುಲ್ಲಾ ಕಸೂರಿ ಎಂದೂ ಕರೆಯುತ್ತಾರೆ. ಆತ ಲಷ್ಕರ್ ಎ ತೊಯ್ಬಾ ಉಪ ಮುಖ್ಯಸ್ಥನಾಗಿದ್ದಾನೆ, ಅಂತಾರಾಷ್ಟ್ರೀಯ ಭಯೋತ್ಪಾದಕ ಹಫೀಜ್ ಸಯೀದ್​ಗೆ ಆಪ್ತ ಎಂದು ಪರಿಗಣಿಸಲಾಗಿದೆ. ಸೈಫುಲ್ಲಾಗೆ ಐಷಾರಾಮಿ ಕಾರುಗಳೆಂದರೆ ಇಷ್ಟ, ಆತನಿಗೆ ಭಾರತದ ಪ್ರಧಾನಿಗಿಂತ ಹೆಚ್ಚಿನ ಭದ್ರತೆ ಇದೆಯಂತೆ.

ಸೈಫುಲ್ಲಾ ಖಾಲಿದ್ ಪಾಕಿಸ್ತಾನದಲ್ಲಿ ಎಷ್ಟು ಪ್ರಭಾವ ಹೊಂದಿದ್ದಾನೆಂದರೆ ಪಾಕಿಸ್ತಾನಿ ಸೇನಾ ಅಧಿಕಾರಿಗಳು ಆತನ ಮೇಲೆ ಹೂಮಳೆ ಸುರಿಸಿ ಬರಮಾಡಿಕೊಳ್ಳುತ್ತಾರೆ. ಆತ ಪಾಕಿಸ್ತಾನದಲ್ಲಿ ವಿಐಪಿಯಂತೆ ಓಡಾಡುತ್ತಾನೆ. ಸೈಫುಲ್ಲಾ ಎರಡು ತಿಂಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಪಂಜಾಬ್​ನ ಕಂಗನ್​ಪುರ ಪ್ರದೇಶಕ್ಕೆ ಬಂದಿದ್ದ, ಅಲ್ಲಿ ಒಂದು ಕಾರ್ಯಕ್ರಮವನ್ನು ಪಾಕಿಸ್ತಾನಿ ಸೇನೆಯ ಕರ್ನಲ್ ಜಾಹಿದ್ ಜರೀನ್ ಖಟ್ಟಕ್ ಆಯೋಜಿಸಿದ್ದರು.