
18ನೇ ಆವೃತ್ತಿಯ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಕ್ವಾಲಿಫೈಯರ್ ಪಂದ್ಯ ಇಂದಿನಿಂದ ಪ್ರಾರಂಭವಾಗಲಿದೆ. ಮೊದಲ ಕ್ವಾಲಿಫೈಯರ್ ಕದನದಲ್ಲಿ ಅಗ್ರ ಎರಡು ಸ್ಥಾನಗಳಲ್ಲಿರುವ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡಗಳು ಮುಖಾಮುಖಿ ಆಗುತ್ತಿವೆ. ಈ ಪಂದ್ಯ ಎರಡೂ ತಂಡಗಳ ಪಾಲಿಗೆ ಮಹತ್ವ ಪಡೆದುಕೊಂಡಿದೆ. ಇದರಲ್ಲಿ ಯಾವುದೇ ತಂಡ ಗೆಲುವು ಸಾಧಿಸಿದರೂ ನೇರವಾಗಿ ಫೈನಲ್ಗೆ ಪ್ರವೇಶ ಪಡೆದುಕೊಳ್ಳಲಿದೆ.
ಈ ಮಹತ್ವದ ಪಂದ್ಯಕ್ಕೆ ಮುಲ್ಲಾನ್ಪೂರದ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣ ಆತಿಥ್ಯ ವಹಿಸಿಕೊಳ್ಳುತ್ತಿದೆ. ಈ ಮೈದಾನದಲ್ಲಿ ಉಭಯ ತಂಡಗಳು ಆಡಿದ್ದ ಹಿಂದಿನ ಪಂದ್ಯದಲ್ಲಿ ಆರ್ಸಿಬಿ 7 ವಿಕೆಟ್ಗಳಿಂದ ಗೆಲುವು ಸಾಧಿಸಿತ್ತು. ಇಂದು ಕೂಡ ಆರ್ಸಿಬಿ ಪಂದ್ಯ ಗೆಲ್ಲುವ ಫೆವರೀಟ್ ತಂಡವಾಗಿದೆ. ಆದರೂ ಪಂಜಾಬ್ ತಂಡ ಆರ್ಸಿಬಿ ಮಣಿಸಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಇದಕ್ಕಾಗಿ ಬಲಿಷ್ಠ ತಂಡದೊಂದಿಗೆ ಮೈದಾನಕ್ಕಿಳಿಯುತ್ತಿದೆ.
ಆರ್ಸಿಬಿಗೆ ಟಕ್ಕರ್ ಕೊಡಲು ಕನ್ನಡಿಗ ಸಜ್ಜು: ಇಂದು ಬೆಂಗಳೂರು ತಂಡವನ್ನು ಹೇಗಾದರೂ ಮಣಿಸಿ ಫೈನಲ್ಗೆ ತಲುಪುವ ಗುರಿಯನ್ನು ಹೊಂದಿರುವ ಪಂಜಾಬ್ ತಂಡ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಜೊತೆಗೆ ಕನ್ನಡಿಗನನ್ನು ಕಣಕ್ಕಿಳಿಸಲು ಮುಂದಾಗಿದೆ. ಹೌದು ವೇಗದ ಬೌಲರ್ ಆಗಿರುವ ವಿಜಯ ಕುಮಾರ್ ವೈಶಾಕ್ ಈ ಪಂದ್ಯಕ್ಕೆ ಕಣಕ್ಕಿಳಿಯಲಿದ್ದಾರೆ. ಇವರು ಈ ವರೆಗೂ ಆಡಿರುವ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಹಿಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧದ ಗೆಲುವಿನಲ್ಲಿ ವಿಜಯ್ ಕುಮಾರ್ ಪ್ರಮುಖರಾಗಿದ್ದರು. ಮುಂಬೈ ತಂಡದ ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟರ್ಗಳಾದ ವಿಲ್ ಜಾಕ್ಸ್ ಮತ್ತು ತಿಲಕ್ ವರ್ಮಾ ವಿಕೆಟ್ ಉರುಳಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಇದೀಗ ಇಂದಿನ ಪಂದ್ಯದಲ್ಲೂ ಕಣಕ್ಕಿಳಿದು ಬೆಂಗಳೂರಿಗೆ ಟಕ್ಕರ್ ಕೊಡಲು ಸಜ್ಜಾಗಿದ್ದಾರೆ.
