ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಆರ್​ಸಿಬಿ ತಂಡ ಐಪಿಎಲ್ ಚಾಂಪಿಯನ್ ಆಗಿರುವುದರಿಂದ ಬೆಂಗಳೂರಿನಲ್ಲಿ ಸಂಭ್ರಮ ಮನೆ ಮಾಡಿದೆ. ವಿಧಾನಸೌಧದಲ್ಲಿ ಸಿಎಂ ಮತ್ತು ಡಿಸಿಎಂ ಅಭಿನಂದನೆ ಸಲ್ಲಿಸಲಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ಮಾನ ಸಮಾರಂಭವಿದೆ. ಹೆಚ್ಚಿನ ಜನಸಂದಣಿ ಇದ್ದು, ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

ಬೆಂಗಳೂರು, ಜೂನ್ 4: ಗುಜರಾತ್​ನ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ ಫೈನಲ್​ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್​ಗಳ ರೋಚಕ ಜಯ ಗಳಿಸಿ ಚಾಂಪಿಯನ್ ಆಗಿ ಆರ್​ಸಿಬಿ ತಂಡ ಬೆಂಗಳೂರಿಗೆ ಆಗಮಿಸಿದೆ. ಆರ್​ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಆಟಗಾರರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಹೀಗಾಗಿ, ಮಧ್ಯಾಹ್ನ 3 ಗಂಟೆ ನಂತರ ರಾತ್ರಿ 8ರ ವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಬೆಂಗಳೂರು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

‘‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​​ಸಿಬಿ ತಂಡಕ್ಕೆ ಸಂಜೆ 5 ರಿಂದ 6 ರವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಲಹೆ ನೀಡಲಾಗಿದೆ. ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ. ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ’’ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಎಕ್ಸ್​ ಸಂದೇಶದಲ್ಲಿ ತಿಳಿಸಿದ್ದಾರೆ.

ಆರ್​ಸಿಬಿ ಆಟಗಾರರನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸುವ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂಗೆ ಕರೆದೊಯ್ಯಲು ಈ ಹಿಂದೆ ಚಿಂತನೆ ನಡೆಸಲಾಗಿತ್ತು. ಆದರೆ, ಭದ್ರತೆಯ ದೃಷ್ಟಿಯಿಂದ ಅದಕ್ಕೆ ಅವಕಾಶ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಈಗಾಗಲೇ ತಿಳಿಸಿದ್ದಾರೆ.

ಆದಾಗ್ಯೂ, ವಿಧಾನಸೌಧ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ಆರ್​​ಸಿಬಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಆರ್​​ಸಿಬಿ ಜೆರ್ಸಿ ಧರಿಸಿ, ಫ್ಲ್ಯಾಗ್ ಹಿಡಿದು ಅಭಿಮಾನಿಗಳು ಸೇರಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಯುವತಿಯರು, ಯುವಕರು ಆಗಮಿಸಿದ್ದು, ಆರ್​​ಸಿಬಿ ಆಟಗಾರರನ್ನು ಹತ್ತಿರದಿಂದ ನೋಡಲು ಕಾತರದಿಂದ ಇದ್ದಾರೆ. ಆರ್​​ಸಿಬಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ