ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಸಿಐಡಿ ವಿಶೇಷ ತಂಡದಿಂದ ತನಿಖೆ

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಗೆಲುವಿನ ಸಂಭ್ರಮಾಚರಣೆ ವೀಕ್ಷಿಸುವ ಭರದಲ್ಲಿ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಬಲಿಯಾದ ಪ್ರಕರಣವು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆಯಾಗಿದೆ.

ಸಿಐಡಿಯ ವಿಶೇಷ ತನಿಖಾ ತಂಡಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಸಿಐಡಿ ಎಸ್‌ಪಿ ಶುಭನ್ವಿತಾ ನೇತೃತ್ವದಲ್ಲಿ ಡಿವೈಎಸ್‌ಪಿಗಳಾದ ಪುರುಷೋತ್ತಮ್ ಹಾಗೂ ಗೌತಮ್ ಅವರನ್ನೊಳಗೊಂಡ ತಂಡವು ತನಿಖೆಯನ್ನು ಕೈಗೆತ್ತಿಕೊಂಡಿದೆ.

ಪ್ರಕರಣದಲ್ಲಿ ಈಗಾಗಲೇ ಬಂಧಿಸಲ್ಪಟ್ಟಿರುವ ಆರ್​ಸಿಬಿ ಫ್ರಾಂಚೈಸಿಯ ಮಾರ್ಕೆಟಿಂಗ್​ ವಿಭಾಗದ ಮುಖ್ಯಸ್ಥ​​​​​​​ ನಿಖಿಲ್​ ಸೋಸ್ಲೆ, ಕಾರ್ಯಕ್ರಮದ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಂಡಿದ್ದ ಡಿಎನ್​ಎ ಎಂಟರ್​ಟೈನ್ಮೆಂಟ್ ಮ್ಯಾನೇಜ್​ಮೆಂಟ್​​ ಕಂಪನಿಯ ಪ್ರತಿನಿಧಿಗಳಾದ ಸುನಿಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದು ಮತ್ತು ನಾಳೆ ಸರ್ಕಾರಿ ರಜಾದಿನವಾದ್ದರಿಂದ ಸೋಮವಾರ ಆರೋಪಿಗಳನ್ನು ಬಾಡಿ ವಾರಂಟ್ ಆಧಾರದಲ್ಲಿ ಸಿಐಡಿ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ.

ಬುಧವಾರ (ಜೂನ್​ 4) ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಲ್ಲದೆ, 40ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ನೂಕುನುಗ್ಗಲಿನಿಂದ ದುರಂತ ಸಂಭವಿಸಿತ್ತು.