
ಬೆಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (NIA) ಮುಂದುವರೆಸಲಿದೆ. ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಭಾನುವಾರ (ಜೂನ್ 8ರಂದು) ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಮುಂದಿನ ತನಿಖೆಯನ್ನು ಎನ್ಐಎ ಅಧಿಕಾರಿಗಳು ಕೈಗೆತ್ತಿಕೊಳ್ಳಲಿದ್ದಾರೆ.
ಮೇ 1ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಸುಹಾಸ್ ಶೆಟ್ಟಿ ಅವರನ್ನು ಕಿನ್ನಿಪದವು ಜಂಕ್ಷನ್ ಬಳಿ 6 ಮಂದಿಯ ತಂಡವೊಂದು ಬೆನ್ನಟ್ಟಿ ಬರ್ಬರವಾಗಿ ಹತ್ಯೆಗೈದಿತ್ತು. ತನಿಖೆ ಕೈಗೊಂಡ ಪೊಲೀಸರು 11 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಗಳಿಂದ ಹಣಕಾಸಿನ ನೆರವು ಸಿಕ್ಕಿದೆ. ರಾಜ್ಯದ ಪೊಲೀಸ್ ಇಲಾಖೆಯು ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಎನ್ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು.

ವಿಜಯೇಂದ್ರ ಪೋಸ್ಟ್: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಗೆ ವಹಿಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ. ‘ಕರಾವಳಿ ಜನತೆಯ ಮನವಿಗೆ ಸ್ಪಂದಿಸಿ ನಮ್ಮ ಕೇಂದ್ರ ಸರ್ಕಾರ ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿರುವ ನಿರ್ಧಾರ ಸ್ವಾಗತಾರ್ಹ ಕ್ರಮವಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವೆ’ ಎಂದು ಬರೆದುಕೊಂಡಿದ್ದಾರೆ.
‘ಕರಾವಳಿಯಲ್ಲಿ ಹಿಂದೂ ಸಮುದಾಯ ಆತಂಕ ಪಡುವ ಪರಿಸ್ಥಿತಿ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಭೀಕರವಾಗಿ ನಡು ರಸ್ತೆಯಲ್ಲಿ ಸುಹಾಸ್ ಕೊಲೆ ನಡೆದಿದೆ. ಈ ಪ್ರಕರಣದ ತನಿಖೆಯ ಹಾದಿ ಕಾಂಗ್ರೆಸ್ ಸರ್ಕಾರದ ಆಡಳಿತದ ನೆರಳಿನಲ್ಲಿ ದಿಕ್ಕು ತಪ್ಪುತ್ತಿದ್ದ ಪರಿ ಹಾಗೂ ನ್ಯಾಯದ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರ ನಿರೀಕ್ಷೆ ಕುಸಿಯುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಎನ್ಐಎಗೆ ವಹಿಸಿರುವ ಕ್ರಮ ಕೊಲೆಗಡುಕರಿಗೆ ಶಿಕ್ಷೆಯಾಗುವ ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳ ಷಡ್ಯಂತ್ರ ಬಯಲು ಮಾಡುವ ಭರವಸೆ ಹುಟ್ಟಿಸಿದೆ. ಕೋಮು ನಿಗ್ರಹ ದಳದ ಮೂಲಕ ಹಿಂದೂ ಕಾರ್ಯಕರ್ತರನ್ನಷ್ಟೇ ಟಾರ್ಗೆಟ್ ಮಾಡಿ ಕರಾವಳಿ ಪ್ರದೇಶದಲ್ಲಿ ಹಿಂದೂ ಸಮಾಜದ ಯುವಕರ ಭವಿಷ್ಯವನ್ನು ಮುಸುಕಾಗಿಸುವ ಮುಸ್ಲಿಂ ಓಲೈಕೆಯ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ವ್ಯವಸ್ಥೆಯನ್ನು ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲು ಬಳಸಿಕೊಳ್ಳುತ್ತಿದ್ದು ಈ ಸಂಬಂಧ ಬಿಜೆಪಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ’ ಎಂದು ವಿಜಯೇಂದ್ರ ಪೋಸ್ಟ್ ಮಾಡಿದ್ದಾರೆ.
