‘ ಎಲ್ಲ ರಾಜ್ಯಗಳಿಗೂ ನ್ಯಾಯ ಒದಗಿಸಲು 16ನೇ ಹಣಕಾಸು ಆಯೋಗದ ಸಭೆಯಲ್ಲಿ ಒತ್ತಾಯ ‘: – ಸಿಎಂ ಸಿದ್ದರಾಮಯ್ಯ

ದೆಹಲಿ/ಬೆಂಗಳೂರು: “16ನೇ ಹಣಕಾಸು ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆಗೆ ಜೊತೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಒತ್ತಿ ಹೇಳಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದೆಹಲಿಯಲ್ಲಿ 16ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, “16ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪರಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಆಯೋಗಕ್ಕೆ ಸಲ್ಲಿಸಲಾಗಿದೆ. 2011-2012ರಲ್ಲಿ ಕರ್ನಾಟಕ ರಾಜ್ಯವು ಜಿಡಿಪಿಗೆ ಶೇ 7ರಷ್ಟು ಕೊಡುಗೆ ನೀಡಿದ್ದರೆ, 2024-25ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟು ಕೊಡುಗೆ ನೀಡುತ್ತಿದೆ” ಎಂದು ತಿಳಿಸಿದರು.

“ಜಿಎಸ್​ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 5ರಷ್ಟಿದ್ದೇವೆ. 5 ವರ್ಷಗಳಿಗೊಮ್ಮೆ ಹಣಕಾಸು ಆಯೋಗ ರಚನೆಯಾಗುತ್ತದೆ. ಸಂವಿಧಾನದ ಅನುಚ್ಛೇದ 180 ಪ್ರಕಾರ ತೆರಿಗೆ ಹಂಚಿಕೆಯಾಗಬೇಕೆಂದು ಹೇಳಲಾಗಿದ್ದು, ಯಾರಿಗೂ ಅನ್ಯಾಯವಾಗಬಾರದೆಂದು ಸ್ಪಷ್ಟಪಡಿಸಿದೆ” ಎಂದರು.

“ಕರ್ನಾಟಕ ರಾಜ್ಯ ಪ್ರತಿ ವರ್ಷ 4.5 ಲಕ್ಷ ಕೋಟಿ ತೆರಿಗೆ ನೀಡುತ್ತದೆ. ಒಂದು ರೂ.ಗಳು ನೀಡಿದರೆ 15 ಪೈಸೆ ನಮಗೆ ವಾಪಸ್ಸು ಬರುತ್ತದೆ. ಈ ಅನ್ಯಾಯ 16ನೇ ಹಣಕಾಸು ಆಯೋಗದಲ್ಲಿ ಆಗಬಾರದು. 14ನೇ ಹಣಕಾಸು ಆಯೋಗದಲ್ಲಿ ನಮ್ಮ ತೆರಿಗೆ ಪಾಲು 4.713%ಕ್ಕೆ ಮತ್ತು 15ನೇ ಹಣಕಾಸು ಆಯೋಗದಲ್ಲಿ ತೆರಿಗೆ ಪಾಲು 3.647% ಕ್ಕೆಇಳಿಕೆ ಮಾಡಿದ್ದರಿಂದ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲನ್ನು ಒಟ್ಟಾರೆ 23%ರಷ್ಟು ಇಳಿಕೆ ಮಾಡಲಾಗಿದೆ. 5 ವರ್ಷಗಳಲ್ಲಿ ಒಟ್ಟು 68,275 ಕೋಟಿ ರೂ.ಗಳು ಕಡಿಮೆಯಾಗಿದೆ” ಎಂದು ಮಾಹಿತಿ ನೀಡಿದರು.

ಸೆಸ್ ಮತ್ತು ಸರ್ಚಾರ್ಜ್ ಶೇ.5ರಷ್ಟನ್ನು ಮೀರಬಾರದು: “ಇದರೊಂದಿಗೆ ಕೇಂದ್ರ ಸರ್ಕಾರ ಸೆಸ್​ ಮತ್ತು ಸರ್ಚಾರ್ಜ್​ನಲ್ಲಿ ನಮಗೆ ಮಾತ್ರವಲ್ಲ ಯಾವ ರಾಜ್ಯಕ್ಕೂ ಪಾಲು ಕೊಡುವುದಿಲ್ಲ. ಕರ್ನಾಟಕದಿಂದ 2024-25ರಲ್ಲಿ ಒಟ್ಟು 5,41,709 ಕೋಟಿ ರೂ. ಸಂಗ್ರಹವಾಗಿದೆ. 8,084 ಕೋಟಿ ರೂ.ಗಳು ಕರ್ನಾಟಕ್ಕೆ ನಷ್ಟವಾಗಿದೆ. ಸೆಸ್ ಮತ್ತು ಸರ್ಚಾರ್ಜ್​ ಶೇ.5ರಷ್ಟನ್ನು ಮೀರಬಾರದು, ಒಂದು ವೇಳೆ 5% ಮೀರಿದರೆ ರಾಜ್ಯಗಳ ತೆರಿಗೆ ಹಂಚಿಕೆಯ ಪಾಲಿನಲ್ಲಿ ಶೇ.50ರಷ್ಟು ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಕರ್ನಾಟಕ ಆರ್ಥಿಕವಾಗಿ ಬೆಳವಣಿಗೆಯಾದರೆ ಕೇಂದ್ರ ಸರ್ಕಾರದ ಬೆಳವಣಿಗೆಯೂ ಆಗುತ್ತದೆ. ಹಾಗಾಗಿ ನ್ಯಾಯಯುತವಾಗಿ ಹಂಚಿಕೆಯಾಗಬೇಕು ಎಂದು ಕೋರಲಾಗಿದೆ” ಎಂದರು.

ರಾಜಸ್ವ ಕೊರತೆ ಅನುದಾನ ರಾಜ್ಯಕ್ಕಿಲ್ಲ: “ರಾಜ್ಯದ ತಲಾದಾಯವು ಆರು ಜಿಲ್ಲೆಗಳನ್ನು ಹೊರತುಪಡೆಸಿ ಕಡಿಮೆಯಿದೆ. ಕಲ್ಯಾಣ ಕರ್ನಾಟಕದಲ್ಲಿ ಇನ್ನೂ ಕಡಿಮೆಯಿದ್ದು, ಇದು ರಾಜಸ್ಥಾನ, ಒರಿಸ್ಸಾ ಮತ್ತು ಪಶ್ಚಿಮ ಬಂಗಾಲದ ಸರಿಸಮಾನವಾಗಿದೆ. ರಾಜಸ್ವ ಕೊರತೆ ಇರುವ ರಾಜ್ಯಗಳಿಗೆ ಈ ಕೊರತೆಯನ್ನು ತುಂಬಲು ಅನುದಾನವನ್ನು ನೀಡಲಾಗುತ್ತದೆ. ಆದರೆ ತೆರಿಗೆ ಹಂಚಿಕೆಯಲ್ಲಿ ನಮ್ಮಷ್ಟೇ ನಷ್ಟವಾಗಿರುವ ಕೇರಳಕ್ಕೆ ಕಳೆದ ವರ್ಷ 38,000 ಕೋಟಿ ರೂ.ಗಳನ್ನು ರಾಜಸ್ವ ಕೊರತೆ ತುಂಬಲು ಒದಗಿಸಲಾಗಿದೆ. ಕರ್ನಾಟಕಕ್ಕೆ ಯಾವುದೇ ರಾಜಸ್ವ ಕೊರತೆ ಅನುದಾನ ಬಂದಿಲ್ಲ” ಎಂದು ತಿಳಿಸಿದರು.

“15ನೇ ಹಣಕಾಸಿನ ಆಯೋಗವು ರಾಜ್ಯಕ್ಕೆ 5,495 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಕರ್ನಾಟಕ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಒದಗಿಸಬೇಕೆಂದು ಶಿಫಾರಸ್ಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಈ ಅನುದಾನವನ್ನು ಒದಗಿಸಲು ನಿರಾಕರಿಸಿತು. ಇದಲ್ಲದೇ ಪೆರಿಫೆರಲ್​ ರಿಂಗ್​ ರಸ್ತೆಗೆ 3,000 ಕೋಟಿ ಹಾಗೂ ಕೆರೆಗಳ ಅಭಿವೃದ್ಧಿಗೆ 3,000 ಕೋಟಿ ನೀಡಬೇಕೆಂದು ಶಿಫಾರಸ್ಸು ಮಾಡಿತ್ತು. ಎರಡೂ ಸೇರಿ 11, 495 ಕೋಟಿ ರೂ.ಗಳನ್ನು ಒದಗಿಸಬೇಕೆಂದು 15ನೇ ಹಣಕಾಸಿನ ಆಯೋಗವು ಶಿಫಾರಸ್ಸು ಮಾಡಿತ್ತು” ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಬೆಂಗಳೂರು ಅಭಿವೃದ್ಧಿಗೆ 1.15 ಲಕ್ಷ ಕೋಟಿ ಒದಗಿಸಲು ಮನವಿ: “ಬೆಂಗಳೂರು ನಗರ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ನಮ್ಮ ಮನವಿಯಲ್ಲಿ ಕೋರಿರುವಂತೆ ಅನುದಾನವನ್ನು ಒದಗಿಸದೇ ಹೋದರೆ ಬೆಂಗಳೂರು ಅಭಿವೃದ್ಧಿಗೆ 1.ಲಕ್ಷ 15 ಸಾವಿರ ಕೋಟಿ ರೂ.ಗಳನ್ನು ಒದಗಿಸಬೇಕು ಎಂದು ಕೋರಿದೆ” ಎಂದರು.

“ಕಲ್ಯಾಣ ಕರ್ನಾಟಕದಲ್ಲಿ ಏಳು ಜಿಲ್ಲೆಗಳನ್ನು ಒಳಗೊಂಡಿದ್ದು 5 ಜಿಲ್ಲೆಗಳ ವಾರ್ಷಿಕ ವರಮಾನವು ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ಒರಿಸ್ಸಾ ಮತ್ತು ಪಶ್ಚಿಮ ಬಂಗಾಲದ ಸರಿಸಮಾನವಿದೆ. ಮಲೆನಾಡು ಪ್ರದೇಶಗಳಲ್ಲಿ ನಮಗೆ ಪ್ರವಾಹ, ಭೂ ಕುಸಿತದಂತಹ ಸಮಸ್ಯೆಗಳು ತಲೆದೋರುತ್ತವೆ. ಆದ್ದರಿಂದ ವಿಶೇಷ ಅನುದಾನ ಒದಗಿಸಬೇಕು ಎಂದು ಕೋರಲಾಗಿದೆ” ಎಂದು ಹೇಳಿದರು.

“ಕೇಂದ್ರ ಸರ್ಕಾರದ ವಿವೇಚನಾ ಅನುದಾನವು 0.3%ಗಿಂತ ಹೆಚ್ಚಾಗಬಾರದು ಎಂದು ಮನವಿ ಮಾಡಲಾಗಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮೂರು ಮಾನದಂಡಗಳ ಪ್ರಕಾರ ನಡೆದುಕೊಂಡಿರುವ ಕರ್ನಾಟಕ ರಾಜ್ಯ. ಹಾಗಾಗಿ, ಆರ್ಥಿಕವಾಗಿ ರಾಜ್ಯ ಸದೃಢವಾಗಿದೆ ಎಂದು ಆಯೋಗದ ಗಮನಕ್ಕೆ ತರಲಾಗಿದೆ. ಹೆಚ್ಚುವರಿ ಮನವಿಯಲ್ಲಿಯೂ ಹೇಳಲಾಗಿದೆ. ಇದೊಂದು ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸುವ ಕೆಲಸವಾಗಬೇಕು. ಕರ್ನಾಟಕಕ್ಕೆ ಅನ್ಯಾಯವಾಗಬಾರದು ಎಂದು ಕೋರಲಾಗಿದೆ” ಎಂದು ವಿವರಿಸಿದರು.

ವೈಜ್ಞಾನಿಕವಾಗಿ ತೆರಿಗೆ ಹಂಚಿಕೆ ಆಗಬೇಕು: “ಕೇರಳ, ತಮಿಳುನಾಡಿಗೂ ನಮ್ಮಷ್ಟೇ ನಷ್ಟವಾಗಿದ್ದರೂ, ಅವರಿಗೆ ರಾಜಸ್ವ ಕೊರತೆ ಅನುದಾನವನ್ನು ನೀಡಲಾಗಿದೆ. ನಮಗೇಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಲಾಗಿದೆ. ಜನಸಂಖ್ಯೆ ಆಧಾರದ ಮೇಲೆ ಅನುದಾನ ಹಂಚಿಕೆ ಮಾಡಬಾರದು ಎಂದು ನಾವು ಹೇಳುವುದಿಲ್ಲ. ಆದರೆ ತೆರಿಗೆ ಹಂಚಿಕೆ ವೈಜ್ಞಾನಿಕವಾಗಿ ಮಾಡಬೇಕು ಎಂದು ಕೋರಲಾಗಿದೆ” ಎಂದು ತಿಳಿಸಿದರು.