ಚಿಕ್ಕಮಗಳೂರು: ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾವಿನ ಸಂಖ್ಯೆ 4ಕ್ಕೇರಿದೆ. ಬೈಕ್ನಲ್ಲಿ ಹೋಗುತ್ತಿದ್ದಾಗ ಮರಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರತಾಲೂಕಿನ ಎಲೆಕಲ್ ಘಾಟಿ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಬಾಳೆಹೊನ್ನೂರು ಸಮೀಪದ ಬಿಳುಕೊಪ್ಪ ಮೂಲದ ಅನಿಲ್ ಪಾಯ್ಸ್ (55) ಎಂದು ಗುರುತಿಸಲಾಗಿದೆ.
ಮೃತ ಅನಿಲ್ ಬೈಕ್ನಲ್ಲಿ ಬಾಳೆಹೊನ್ನೂರಿಗೆ ಹೋಗುತ್ತಿದ್ದರು. ಈ ವೇಳೆ ಎಲೆಕಲ್ ಘಾಟಿ ಬಳಿ ಹೋಗುವಾಗ ಭಾರೀ ಗಾಳಿ-ಮಳೆಗೆ ಮರ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಬಾಳೆಹೊನ್ನೂರು ಪಿಎಸ್ಐ ರವೀಶ್ ಭೇಟಿ ನೀಡಿ, ಅಗ್ನಿಶಾಮಕ ವಾಹನದಲ್ಲೇ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿದ್ದರು. ಆದರೆ ತಲೆಗೆ ಭಾರೀ ಪೆಟ್ಟು ಬಿದ್ದ ಪರಿಣಾಮ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೂ ಮುನ್ನ ಸಿಡಿಲು ಬಡಿದು ಇಬ್ಬರು ಹಾಗೂ ಮರಬಿದ್ದು ಓರ್ವ ಸಾವನ್ನಪ್ಪಿದ್ದರು.
