ಸರಣಿ ಆರಂಭಕ್ಕೆ 2 ದಿನಗಳಿರುವಾಗ ಟೀಮ್ ಇಂಡಿಯಾಗೆ ಯುವ ವೇಗಿ ಎಂಟ್ರಿ

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್‌ ಸರಣಿಯು ಶುಕ್ರವಾರದಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯದ ಮೂಲಕ ಶುಭ್ ಮನ್ ಗಿಲ್ ಭಾರತ ಟೆಸ್ಟ್‌ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಪ್ರತಿಷ್ಠಿತ ಸರಣಿ ಶುರುವಾಗಲು ಎರಡು ದಿನಗಳಿರುವಾಗ ಟೀಮ್ ಇಂಡಿಯಾಗೆ ಯುವ ವೇಗಿ ಹರ್ಷಿತ್ ರಾಣಾ ಆಯ್ಕೆಯಾಗಿದ್ದಾರೆ. ಈ ಹಿಂದೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳಿಗೆ ಆಯ್ಕೆ ಮಾಡಲಾದ 18 ಸದಸ್ಯರಲ್ಲಿ ರಾಣಾ ಕಾಣಿಸಿಕೊಂಡಿರಲಿಲ್ಲ.

ಆದರೆ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯಕ್ಕಾಗಿ ಆಯ್ಕೆ ಮಾಡಲಾದ ಭಾರತ ಎ ತಂಡದಲ್ಲಿ ಹರ್ಷಿತ್ ರಾಣಾ ಕಾಣಿಸಿಕೊಂಡಿದ್ದರು. ಇದೀಗ ಇಂಗ್ಲೆಂಡ್ ನಲ್ಲೇ ಇರುವ ಯುವ ವೇಗಿಗೆ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲು ಸೂಚಿಸಲಾಗಿದೆ. ಇತ್ತ ಹರ್ಷಿತ್ ರಾಣಾ ಅವರ ದಿಢೀರ್ ಆಯ್ಕೆಗೆ ಬಿಸಿಸಿಐ ಯಾವುದೇ ಸ್ಪಷ್ಟನೆ ನೀಡಿಲ್ಲ.

ಇದಾಗ್ಯೂ ಈ ಆಯ್ಕೆಗೆ ಮುಖ್ಯ ಕಾರಣ ಭಾರತೀಯ ಬೌಲರ್‌ಗಳ ಗಾಯದ ಸಮಸ್ಯೆ ಎಂದು ತಿಳಿದು ಬಂದಿದೆ. ಟೀಮ್ ಇಂಡಿಯಾದಲ್ಲಿ ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಆಕಾಶ್ ದೀಪ್, ಪ್ರಸಿಧ್ ಕೃಷ್ಣ ಸೇರಿದಂತೆ ಒಟ್ಟು ಐವರು ವೇಗಿಗಳಿದ್ದಾರೆ. ಇವರಲ್ಲಿ ಕೆಲವರು ಕಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಹರ್ಷಿತ್ ರಾಣಾ ಅವರನ್ನು ಹೆಚ್ಚುವರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹರ್ಷಿತ್ ರಾಣಾ ಟೀಮ್ ಇಂಡಿಯಾ ಪರ 2 ಟೆಸ್ಟ್ ಪಂದ್ಯಗಳನ್ನಾಡಿದ್ದರು. ಈ ವೇಳೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಹರ್ಷಿತ್ ಕೇವಲ 4 ವಿಕೆಟ್ ಪಡೆಯಲು ಮಾತ್ರ ಯಶಸ್ವಿಯಾಗಿದ್ದರು. ಹೀಗಾಗಿಯೇ ಈ ಬಾರಿಯ ಟೆಸ್ಟ್ ತಂಡದಲ್ಲಿ ಅವರಿಗೆ ಸ್ಥಾನ ನೀಡಲಾಗಿರಲಿಲ್ಲ. ಇದೀಗ ಹೆಚ್ಚುವರಿ ವೇಗಿಯಾಗಿ ಆಯ್ಕೆಯಾಗಿದ್ದು, ಅದರಂತೆ ಜೂನ್ 20 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 23 ವರ್ಷದ ಹರ್ಷಿತ್ ರಾಣಾ ಕೂಡ ಕಾಣಿಸಿಕೊಳ್ಳಲಿದ್ದಾರೆ.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.