ಸರ್ಕಾರದ ವಿರುದ್ಧ ಆಕ್ರೋಶ ತೋರಿದ ಸಾರಿಗೆ ನೌಕರರು – ಇಂದಿನಿಂದ ಬಸ್ ಸೇವೆ ಸ್ಥಗಿತ

ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ (ಇಂದಿನಿಂದ) ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಇಳಿದಿದ್ದಾರೆ. 1800 ಕೋಟಿ ಹಿಂಬಾಕಿ, ಕೋಟ್ಯಾಂತರ ರುಪಾಯಿ ಪಿಎಫ್ ಬಾಕಿ, ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ಕೊಡಲು ಸರ್ಕಾರ ಒಪ್ಪದಿದ್ದ ಕಾರಣ, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿಲ್ಲ.

ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರದ ಜೊತೆ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇದರ ನಡುವೆ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಈ ಎಲ್ಲ ಬೆಳವಣಿಗೆಯ ಹೊರತಾಗಿಯೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯದ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಇಂದಿನಿಂದ (ಆ.5) ಬೆಳಗ್ಗೆಯಿಂದಲೇ ಮುಷ್ಕರಕ್ಕಿಳಿದಿದ್ದಾರೆ. ಇದರಿಂದ ರಾಜ್ಯಾದ್ಯಂತ ಬಸ್‌ಗಳ ಸೇವೆಯಲ್ಲಿ ವ್ಯತ್ಯುಯವಾಗಿ 1 ಕೋಟಿಗೂ ಹೆಚ್ಚು ಪ್ರಯಾಣಿಕರು ಪರದಾಡುವ ಆತಂಕ ಎದುರಾಗಿದೆ. 

ಬೆಳಗ್ಗೆ 6 ಗಂಟೆಯಿಂದಲೇ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು, ನಾಲ್ಕು ನಿಗಮಗಳ ಬಸ್‌ಗಳ ಸಂಚಾರ ಸ್ತಬ್ಧಗೊಂಡಿವೆ. ಬೆಂಗಳೂರು, ಮೈಸೂರು, ಕಲಬುರಗಿ, ದಾವಣಗೆರೆ, ಹಾಸನ, ಬೆಳಗಾವಿ, ಚಿಕ್ಕಬಳ್ಳಾಪುರ, ಹಾವೇರಿ ಸೇರಿದಂಗೆ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಪ್ರತಿಭಟನೆಗೆ ಧುಮುಕಿದ್ದಾರೆ. ಆದ್ರೆ ಕೆಲವೆಡೆ ಪ್ರಯಾಣಿಕರಿಗೆ ಬಂದ್‌ ಬಿಸಿ ತಟ್ಟಿಲ್ಲ, ಏಕೆಂದರೆ ತುರ್ತು ಕಾರ್ಯಗಳಿಗೆ ಪ್ರಯಾಣಿಕರು ಖಾಸಗಿ ಬಸ್, ಟ್ರಾವೆಲ್ಸ್, ಆಟೋ, ಟ್ಯಾಕ್ಸಿಗಳ ಮೊರೆ ಹೋಗುತ್ತಿದ್ದಾರೆ.

ಈ ನಡುವೆ ಹೈಕೋರ್ಟ್ ಆದೇಶದ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲು ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಮಂಗಳವಾರ ಬೆಳಗ್ಗೆ 10 ಗಂಟೆ ವೇಳೆಗೆ ಸಮಿತಿ ಪದಾಧಿಕಾರಿಗಳ ಸಭೆ ನಡೆಸಿ ಮುಷ್ಕರದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ. ಒಂದು ವೇಳೆ ಕ್ರಿಯಾ ಸಮಿತಿ ಪೂರ್ವ ನಿರ್ಧಾರದಂತೆ ಮುಷ್ಕರಕ್ಕೆ ಇಳಿದರೇ, ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಲಿದ್ದು ಪ್ರಯಾಣಿಕರಿಗೆ ಬಿಸಿ ತಟ್ಟಲಿದೆ.

ಸಂಧಾನ ವಿಫಲ
ಇನ್ನೂ ನಿನ್ನೆ ಮೂರನೇ ಸಂಧಾನ ಸಭೆ ಖುದ್ದು ಸಿಎಂ ನೇತೃತ್ವದಲ್ಲಿ ನಡೆದರೂ ಒಮ್ಮತದ ನಿರ್ಧಾರಕ್ಕೆ ಬರಲಾಗಿಲ್ಲ. 38 ತಿಂಗಳ ಹಿಂಬಾಕಿ 1,800 ಕೋಟಿ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕೆ 800 ಕೋಟಿ ರೂ. ಆದರೂ ಈಗ ಪಾವತಿಸಿ, ನಂತರ ಕಂತಿನ ರೂಪದಲ್ಲಿ 1,000 ಕೋಟಿ ರೂ ಕೊಡುವಂತೆ ಮನವಿ ಮಾಡಿದಾಗ ಸಿಎಂ ಇದಕ್ಕೆ ಒಪ್ಪಲಿಲ್ಲ ಎನ್ನಲಾಗಿದೆ. ಹೀಗಾಗಿ ಸಭೆಯು ವಿಫಲವಾಗಿದ್ದು, ಕಾರ್ಮಿಕ ಮುಖಂಡ ಮುಷ್ಕರದ ಘೋಷಣೆ ಮಾಡಿದರು.

ಇನ್ನೂ ಸಿಎಂ ಸಭೆಗೂ ಮುನ್ನವೇ ಸಾರಿಗೆ ಇಲಾಖೆ ಆಗಸ್ಟ್‌ ನಾಲ್ಕರಿಂದಲೇ ಸಾರಿಗೆ ನೌಕರರ ರಜೆಗಳನ್ನ ರದ್ದುಗೊಳಿಸಿದೆ. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಉಳಿದೆಲ್ಲ ರಜೆಗಳನ್ನ ರದ್ದುಗೊಳಿಸಲಾಗಿದೆ. ಅನಿವಾರ್ಯವಿದ್ದರೆ ವಾರದ ರಜೆಗಳನ್ನು ಕಡಿತಗೊಳಿಸಿ ಕರ್ತವ್ಯಕ್ಕೆ ನಿಯೋಜಿಸಿ, ಒಂದು ವೇಳೆ ಕೆಲಸಕ್ಕೆ ಬಾರದಿದ್ದರೇ ಅವರ ವೇತನ ಕಟ್‌ ಮಾಡುವಂತೆ ನಾಲ್ಕು ನಿಗಮಗಳ ಅಧಿಕಾರಿಗಳಿಗೆ ಸೂಚನೆ ನೀಡಿದೆ.