ಧಾರಾಕಾರ ಮಳೆಯಲ್ಲೇ ವಿದಾಯ – ಕರ್ನಾಟಕ ಪ್ರವಾಸ ಮುಗಿಸಿ ದೆಹಲಿಗೆ ಹಿಂತಿರುಗಿದ ಪ್ರಧಾನಿ ಮೋದಿ

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿದ ಪ್ರಧಾನಿ ಮೋದಿ , ಕರ್ನಾಟಕದ ಕಾರ್ಯಕ್ರಮ ಮುಗಿಸಿ ದೆಹಲಿಗೆ ವಾಪಸ್ಸಾದರು.

ಕರ್ನಾಟಕ ಸರ್ಕಾರ, ವಸತಿ ಮತ್ತು ಕೇಂದ್ರ ನಗರ ವ್ಯವಹಾರಗಳ ಸಚಿವಾಲಯ ಹಾಗೂ ಕೇಂದ್ರ ರೈಲ್ವೆ ಮಂಡಳಿ ಮತ್ತು ರೈಲ್ವೇ ಸಚಿವಾಲಯದ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ಮೆಟ್ರೋ ಹಂತ-2ರ ಹಳದಿ ಮಾರ್ಗ ಉದ್ಘಾಟನೆ, ಬೆಂಗಳೂರು ಮೆಟ್ರೋ ಹಂತ-3ರ ಶಂಕುಸ್ಥಾಪನೆ, ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸ್ಸಾದರು.

ಸುರಿವ ಮಳೆಯ ನಡುವೆಯೇ ಪ್ರಧಾನ ಮಂತ್ರಿಗಳನ್ನು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕರಾದ ಛಲವಾದಿ ಟಿ. ‌ನಾರಾಯಣಸ್ವಾಮಿ ಅವರು ಆತ್ಮೀಯವಾಗಿ ಬೀಳ್ಕೊಟ್ಟರು. 

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.