ಬೆಂಗಳೂರು: ಮತ್ತೆ ಜೈಲು ಸೇರಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಢವಢವ ಶುರುವಾಗಿದೆ. ಏಕೆಂದ್ರೆ ಫಾಸ್ಟ್ ಟ್ರ್ಯಾಕ್ ಕೋರ್ಟ್ಗೆ ಮನವಿ ಸಲ್ಲಿಸಲು ಪೊಲೀಸರು ತಯಾರಿ ನಡೆಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಪೊಲೀಸರು ತಯಾರಿ ನಡೆಸಿದ್ದಾರೆ.
6 ತಿಂಗಳ ಒಳಗೆ ಟ್ರಯಲ್ ಮುಗಿಸಿ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡುವುದಲ್ಲದೇ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪೊಲೀಸರು ಈ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಾನೂನು ಇಲಾಖೆ ಜೊತೆಗೆ ಚರ್ಚಿಸಿ ಸೋಮವಾರ ಸರ್ಕಾರಕ್ಕೆ ಮನವಿ ಮಾಡುವ ಸಾಧ್ಯತೆಗಳಿಗೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಜಾಮೀನು ರದ್ದುಗೊಳಿಸಿದ್ದ ಸುಪ್ರೀಂ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ದರ್ಶನ್, ಎ-1 ಪವಿತ್ರಾಗೌಡ ಸೇರಿದಂತೆ, 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಕೊಟ್ಟಿದ್ದ ಜಾಮೀನನ್ನ ಸುಪ್ರೀಂ ಕೋರ್ಟ್ ಇತ್ತೀಚೆಗಷ್ಟೇ ರದ್ದುಗೊಳಿಸಿತ್ತು. ಎಲ್ಲಾ ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಬೇಕು ಅಂತ ಸುಪ್ರೀಂ ಸೂಚನೆ ನೀಡಿದ್ದರಿಂದ ಪೊಲೀಸರು ಬಂಧಿಸಿದ್ದರು. ಐವರು ಆರೋಪಿಗಳಿಗೆ ಠಾಣೆಯಲ್ಲೇ ವೈದ್ಯಕೀಯ ಪರೀಕ್ಷೆ ನಡೆಸಿದ್ದರು. ವೈದ್ಯಕೀಯ ತಪಾಸಣೆ ಬಳಿಕ ಡಿಗ್ಯಾಂಗ್ನ ಐವರು ಆರೋಪಿಗಳನ್ನು ಕೋರಮಂಗಲದಲ್ಲಿರುವ ಜಡ್ಜ್ ನಿವಾಸದ ಎದುರು ಹಾಜರುಪಡಿಸಿ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಯಿತು.
