ಬಸವಕಲ್ಯಾಣ ಹತ್ತಿರ ಭೀಕರ ಅಪಘಾತ – ತಾಯಿ, ಮಗಳಿಗೆ ಜೀವಹಾನಿ

ಬೀದರ್: ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ ನಡೆದಿದೆ.

ಬೋಸ್ಲಾ ಗ್ರಾಮದ ಮೂಲದವರಾದ ತಾಯಿ ತುಕ್ಕಮ್ಮ ಕಿಶನ್ (56) ಹಾಗೂ ಮಗಳು ಸುರೇಖಾ ಗುಂಡಪ್ಪ (30) ಮೃತರು.

ಮಹಾರಾಷ್ಟ್ರಕ್ಕೆ ಹೋಗಿದ್ದ ಇಬ್ಬರು ಬೈಕ್ ಮೇಲೆ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಹಾಲಿನ ಗೂಡ್ಸ್ ಗಾಡಿ ಟಿವಿಎಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.