ಹಾಸನ: ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ 10 ಜನರ ಸಾವಿಗೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಟ್ರಕ್ ಚಾಲಕ ಭುವನೇಶ್ನನ್ನು ಶನಿವಾರ ರಾತ್ರಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಪೊಲೀಸರು ಆತನನ್ನು ಕರೆದೊಯ್ದು, ಇಂದು (ಸೆ.14) ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ತಿರ್ಮಾನಿಸಿದ್ದು, ಅಪಘಾತದಲ್ಲಿ ಚಾಲಕನಿಗೆ ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಪೆಟ್ಟಾಗಿತ್ತು. ಆತನನ್ನು ನಾಗಮಂಗಲದ ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯದಲ್ಲಿ ಸುಧಾರಣೆಯಾದ ಹಿನ್ನೆಲೆ ಡಿಸ್ಚಾರ್ಜ್ ಮಾಡಲಾಗಿತ್ತು.
ಪೊಲೀಸರು ಆತನನ್ನು ವಶಕ್ಕೆ ಪಡೆದ ಬಳಿಕ ಎದೆನೋವು, ಆರೋಗ್ಯದ ಸಮಸ್ಯೆ ಆಗುತ್ತಿದೆ ಎಂದು ಹೇಳಿಕೊಂಡಿದ್ದಾನೆ. ಆತನನ್ನು ಮತ್ತೆ ಪೊಲೀಸರು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದ ವೇಳೆ ಚಾಲಕ ಮದ್ಯಪಾನ ಮಾಡಿ ಟ್ರಕ್ ಚಲಾಯಿಸಿದ ಎಂಬುದಕ್ಕೆ ರಕ್ತ ಮಾದರಿ ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ರಕ್ತ ಪರೀಕ್ಷೆಯ ವರದಿ ಬರುವ ಸಾಧ್ಯತೆ ಇದೆ.
