ಬಾರಾಮತಿಯಲ್ಲಿ ವಿಮಾನ ಅಪಘಾತ; ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್ ಕೊನೆಯುಸಿರು

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರು ಪ್ರಯಾಣಿಸುತ್ತಿದ್ದ ವಿಮಾನವು ಬುಧವಾರ ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ. ಈ ಅವಘಡದಲ್ಲಿ ಡಿಸಿಎಂ ಪವಾರ್‌ ಅವರು ಮೃತಪಟ್ಟಿದ್ದಾರೆ. ಇವರೊಂದಿಗೆ ಪ್ರಯಾಣಿಸುತ್ತಿದ್ದ ಆರು ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಜಿಲ್ಲಾ ಪಂಚಾಯತ್‌ ಚುನಾವಣೆ ಹಿನ್ನೆಲೆ, ಪ್ರಚಾರಕ್ಕಾಗಿ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮುಂಬೈ: ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್ (66) ಅವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಸ್ಪಷ್ಟಪಡಿಸಿದೆ.

ಜಿಲ್ಲಾ ಪಂಚಾಯತ್‌ ಚುನಾವಣೆ ಹಿನ್ನೆಲೆ ಸಾರ್ವಜನಿಕ ಸಭೆ ನಡೆಸಲು ಅಜಿತ್‌ ಪವಾರ್‌ ಅವರು ಬಾರಾಮತಿಗೆ ಹೊರಟಿದ್ದರು. ಅವರೊಂದಿಗೆ ವಿಮಾನದಲ್ಲಿದ್ದ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಘಟನಾ ಸ್ಥಳದಿಂದ ಆರು ಮೃತದೇಹ ಹೊರತೆಗೆದು ಸದ್ಯ ಆಸ್ಪತ್ರೆಗೆ ರವಾನಿಸಿದ್ದೇವೆ. ಆರಂಭದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿದ್ದವು, ನಂತರ ಉಳಿದವುಗಳನ್ನು ಹೊರತೆಗೆಯಲಾಯಿತು ಎಂದು ಪುಣೆ ಪೊಲೀಸ್ ಅಧೀಕ್ಷಕ ಸಂದೀಪ್ ಗಿಲ್ ಮಾಹಿತಿ ನೀಡಿದ್ದಾರೆ.

ʻವಿಮಾನವು ಬಾರಾಮತಿಯಲ್ಲಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ ಪೈಲಟ್‌ನ ನಿಯಂತ್ರಣ ತಪ್ಪಿ ರನ್‌ವೇನಿಂದ ಪಕ್ಕಕ್ಕೆ ಜಾರಿ ಸ್ಫೋಟಗೊಂಡಿದೆ. ಈ ಅವಘಡದಲ್ಲಿ ಡಿಸಿಎಂ ಅಜಿತ್‌ ಪವಾರ್‌ ಅವರು ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಸ್ಪಷ್ಟಪಡಿಸಿದೆ.