ಸಿಎಂ ಮಾಧ್ಯಮ ಸಂಯೋಜಕರಾಗಿ ಶಂಕರ್‌ ಪಾಗೋಜಿ ನೇಮಕ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮ ಸಂಯೋಜಕರಾಗಿ ಶಂಕರ್‌ ಪಾಗೋಜಿ ನೇಮಕ ಮಾಡಲಾಗಿದೆ. ಈ ಹಿಂದೆ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠದ ನಿಧನ ಹಿನ್ನೆಲೆ ಅವರ ಸ್ಥಾನಕ್ಕೆ ಧಾರವಾಡ ಮೂಲದ ಶಂಕರ್‌ ಪಾಗೋಜಿಯನ್ನು ಸರ್ಕಾರದ ಅಧೀನ ಕಾರ್ಯದರ್ಶಿ ಟಿ ಮಹಂತೇಶ್‌ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಪತ್ರಕರ್ತ, ಲೇಖಕ ಶಂಕರ ಪಾಗೋಜಿ ಮೂಲತಃ ಧಾರವಾಡ ತಾಲೂಕಿನ ದೇವಗಿರಿಯವರು. ಬಿ.ಎ ಪದವಿಯನ್ನು ಧಾರವಾಡದ ಕಿಟಲ್ ಕಾಲೇಜಿನಲ್ಲಿ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಪೂರ್ಣಗೊಳಿಸಿದರು.

ಅನಂತರದಲ್ಲಿ ಕರ್ನಾಟಕದ ಪ್ರಮುಖ ದಿನ ಪತ್ರಿಕೆಗಳಾದ ವರದಿಗಾರನಾಗಿ ಕಾರ್ಯನಿರ್ವಹಿಸಿದ ಅವರು ವಿದ್ಯುನ್ಮಾನ ಮಾಧ್ಯಮ ಕ್ಷೇತ್ರಗಳಲ್ಲಿ ಕಾರ್ಯಚಟುವಟಿಕೆ ಮುಂದುವರೆಸಿ ಕಸ್ತೂರಿ ನ್ಯೂಸ್ ಹಾಗೂ ಸುವರ್ಣ ನ್ಯೂಸ್ ಚಾನೆಲ್ ಗಳಲ್ಲಿ ಕಾರ್ಯನಿರ್ವಹಿಸಿ, ಪ್ರಸ್ತುತ ಉದಯವಾಣಿ ದಿನಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಹಿತ್ಯಿಕವಾಗಿಯೂ ಗುರುತಿಸಿಕೊಂಡಿರುವ ಶಂಕರ ಪಾಗೋಜಿ ಹಲವು ಕೃತಿಗಳನ್ನು ಪ್ರಕಟಿಸಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತಮ್ಮ ಪ್ರಥಮ ಕೃತಿಗೆ ಪ್ರಶಸ್ತಿಯನ್ನು ಪಡೆದಿದ್ದಾರೆ.